ನನ್ನ ಪುಟಗಳು

26 ನವೆಂಬರ್ 2013

ಒಳ್ನುಡಿ (ಪದ್ಯ-6)

೮ನೇ ತರಗತಿಯಲ್ಲಿ ಅಳವಡಿಸಿರುವ ಸರ್ವಜ್ಷನ ೬ ತ್ರಿಪದಿಗಳನ್ನು ಕನ್ನಡ ಸಾಹಿತ್ಯ ಪರಿಷತ್ತು(ಬೆಂಗಳೂರು) ಪ್ರಕಟಿಸಿರುವ ‘ಸರ್ವಜ್ಞನ ವಚನಗಳು’ ಕೃತಿಯಿಂದ ಆರಿಸಿಕೊಳ್ಳಲಾಗಿದೆ.
ಸರ್ವಜ್ಞನ ಪರಿಚಯ
ಸರ್ವಜ್ಞ  (ಚಿತ್ರ ಕೃಪೆ: ಗೂಗಲ್ ಚಿತ್ರಗಳು)

  • ಸರ್ವಜ್ಞ ಎಂದರೆ ಸಂಸ್ಕೃತದಲ್ಲಿ ಎಲ್ಲವನ್ನೂ ತಿಳಿದವ ಎಂಬ ಅರ್ಥವಿದೆ. 
  • ಈತ ಕನ್ನಡದ ತ್ರಿಪದಿ ಸಾಹಿತ್ಯದ ಪ್ರಮುಖ ಕವಿಗಳಲ್ಲಿ ಒಬ್ಬ.
  • ಈತನ ಕಾಲ ಮತ್ತು ಜೀವನಗಳ ಬಗ್ಗೆ ನಿಖರವಾಗಿ ಹೆಚ್ಚು ತಿಳಿದಿಲ್ಲ. ಇತರ ಲೇಖಕರು ಅವನ ಬಗ್ಗೆ ಮಾಡಿರುವ ಪ್ರಸ್ತಾಪಗಳಿಂದ ಮತ್ತು ಸರ್ವಜ್ಞನ ಭಾಷಾ ಪ್ರಯೋಗದ ಲಕ್ಷಣಗಳ ಅಧ್ಯಯನದಿಂದ ಈತನು ಜೀವಿಸಿದ್ದ ಕಾಲ ಸುಮಾರಾಗಿ ೧೭ನೇ ಶತಮಾನದ ಆದಿಭಾಗ ಎಂದು ಪ್ರತಿಪಾದಿಸಲಾಗಿದೆ. 
  • ಪ್ರಾಯಶಃ ಪುಷ್ಪದತ್ತ  ಈತನ ನಿಜನಾಮವಾಗಿದ್ದು, ಸರ್ವಜ್ಞ ಎಂಬುದು ಈತನ ಕಾವ್ಯನಾಮ.
ಸರ್ವಜ್ಞ  (ಚಿತ್ರ ಕೃಪೆ: ಗೂಗಲ್ ಚಿತ್ರಗಳು)

ಜನನ ಮತ್ತು ಬಾಲ್ಯ

  • ಅವನ ಹೆತ್ತಮ್ಮ ಕುಂಬಾರ ಮಾಳೆ, ಪ್ರೀತಿಯಿಂದ ನಾಮಕರಣ ಮಾಡಿದ ಹೆಸರು -ಪುಷ್ಪದತ್ತ. ಸಾಕು ತಾಯಿ ಮಲ್ಲಕ್ಕ. ತಂದೆ ಬಸವರಸ. ಹಾವೇರಿ ಜಿಲ್ಲೆಯ ಹಿರೇಕೇರೂರು ತಾಲ್ಲೂಕು ಮಾಸೂರಿನಲ್ಲಿ ವಾಸವಾಗಿದ್ದ ಆರಾಧ್ಯ ಬ್ರಾಹ್ಮಣ, ಬಸವರಸನು, ಎಷ್ಟು ದಿನಗಳಾದರೂ ಮಕ್ಕಳಾಗ ದಿದ್ದಾಗ ಮಲ್ಲಮ್ಮನನ್ನು ಸಮಾಧಾನ ಮಾಡಿ, ಪುತ್ರಸಂತಾನದ ವರ ಪಡೆಯಲು ಕಾಶೀ ಕ್ಷೇತ್ರಕ್ಕೆ ಹೊರಡುತ್ತಾನೆ.
  • ಭಕ್ತಿಯಿಂದ ಸೇವೆ ಮಾಡಿದ ಬಸವರಸನಿಗೆ ಕಾಶಿ ವಿಶ್ವನಾಥನು ಕನಸಿನಲ್ಲಿ ಪ್ರತ್ಯಕ್ಷನಾಗಿ, 'ನಿನಗೆ ಪುತ್ರಪ್ರಾಪ್ತಿಯಾಗುವುದು. ಹುಟ್ಟುವ ಮಗನು ನನ್ನ ಪ್ರಸಾದದಿಂದ ಮಹಾಜ್ಞಾನಿಯಾಗುವನು' ಎಂದು ಹೇಳಲು ಆನಂದಭರಿತನಾದ ಬಸವರಸನು, ಪ್ರಾತಃಕಾಲದಲ್ಲಿ ಎದ್ದು, ಪವಿತ್ರ ಗಂಗಾಸ್ನಾನ ಮಾಡಿ, ವಿಶ್ವನಾಥನನ್ನು ಅರ್ಚಿಸಿ, ಪ್ರಸಾದಗಳೊಂದಿಗೆ ತನ್ನ ಗ್ರಾಮದ ಹಾದಿ ಹಿಡಿದನು.
  • ಹಗಲಿರುಳು ಪ್ರಯಾಣ ಮಾಡಿ ಅನೇಕ ಗ್ರಾಮಗಳಲ್ಲಿ ವಿಶ್ರಮಿಸಿ, ದಾರಿಯಲ್ಲಿ ಸಿಕ್ಕ 'ಅಂಬಲೂರ' ಎಂಬ ಗ್ರಾಮಕ್ಕೆ ಬರುವಾಗ ಭಯಂಕರ ಗುಡುಗು, ಸಿಡಿಲುಗಳಿಂದ ಮಳೆ ಸುರಿಯುತ್ತಿತ್ತು. ಸಮೀಪದಲ್ಲಿದ್ದ ಕುಂಬಾರಸಾಲೆಯಲ್ಲಿ ಕುಂಬಾರ ಮಾಳಿ ಎಂಬುವಳ ಮನೆಯಲ್ಲಿ ವಸತಿ ಮಾಡಿದನು. ಕಾಲಧರ್ಮ ಸಂಯೋಗದಿಂದ ಮಾಳಿಯಲ್ಲಿ ವ್ಯಾಮೋಹಗೊಂಡ ಬಸವರಸನಿಗೆ ಕಾಮ ವಿಕಾರವಾಯಿತು.
  • ಕಾಶಿಯಿಂದ ತಂದ ತೀರ್ಥ ಪ್ರಸಾದಗಳನ್ನು ಕೊಟ್ಟು ಅವಳ ಸಂಗ ಮಾಡಿದನು. ೯ ತಿಂಗಳ ನಂತರ ಮಾಳಿ ದಿವ್ಯ ತೇಜಸ್ಸಿನ ಗಂಡು ಕೂಸಿಗೆ ಜನ್ಮವಿತ್ತಳು. 'ಪುಷ್ಪದತ್ತ'ನೆಂದು ನಾಮಕರಣವೂ ಆಯಿತು. ಮುಂದೆ ಈ ಮಗುವೇ ಜಗತ್ತಿಗೆ ಸರ್ವಜ್ಞನೆಂದು ಪ್ರಸಿದ್ಧಿಯಾದನು. ಬಾಲ್ಯದಲ್ಲಿಯೆ ಅಗಾಧವಾದ ಪಾಂಡಿತ್ಯವನ್ನು ಶಿವನ ವರಪ್ರಸಾದದಿಂದ ಪಡೆದಿದ್ದನು.
  • ತಂದೆ ತಾಯಿಗಳಿಂದ ಅಗಲಿ ಪುಣ್ಯಕ್ಷೇತ್ರಗಳನ್ನೂ ಗುರುಮಠಗಳನ್ನೂ ಭೇಟಿ ಮಾಡಿ ಜ್ಞಾನಾರ್ಜನೆ ಮಾಡಿದನು. ಎಲ್ಲಾ ಶಾಸ್ತ್ರಗಳ ಜ್ಞಾನವನ್ನು ಸಂಪಾದಿಸಿದನು. ಅವನ ಜನಪ್ರಿಯ ವಚನಗಳು ಅವನ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ಒದಗಿಸಿವೆ. ಅವನು ರಚಿಸಿದ ತ್ರಿಪದಿಗಳಿಗೆ ಲೆಖ್ಖವಿಲ್ಲ. ಅವನು ಆಶುಕವಿಯಾದ್ದರಿಂದ, ಎಷ್ಟೋ ಕವನಗಳು ಅವನ ಸ್ಮೃತಿಯಲ್ಲೇ ಉಳಿದಿರಬಹುದು. ಸುಮಾರು ೭,೦೭೦ ವಚನಗಳು ಲಭ್ಯವಾಗಿದೆಯೆಂದು ತಜ್ಞರ ಅಭಿಪ್ರಾಯ.

ತ್ರಿಪದಿಗಳು

ಒಟ್ಟು ಸುಮಾರು ೧,೦೦೦ ತ್ರಿಪದಿಗಳು ಸರ್ವಜ್ಞನ ಹೆಸರಿನಲ್ಲಿ ದಾಖಲಾಗಿವೆ. ಚರಿತ್ರಜ್ಞರ ಪ್ರಕಾರ ಇವುಗಳಲ್ಲಿ ಕೆಲವು ತ್ರಿಪದಿಗಳು ನಂತರದ ಕಾಲದಲ್ಲಿ ಬೇರೆ ಬೇರೆ ಲೇಖಕರಿಂದ ಬರೆಯಲ್ಪಟ್ಟಿರಬಹುದು. ಸರ್ವಜ್ಞನ ತ್ರಿಪದಿಗಳು ತಮ್ಮ ಸರಳತೆ ಮತ್ತು ಪ್ರಾಸಬದ್ಧತೆಯಿಂದ ಜನಪ್ರಿಯವಾಗಿವೆ. ಈ ತ್ರಿಪದಿಗಳು ಮುಖ್ಯವಾಗಿ ನೈತಿಕ, ಸಾಮಾಜಿಕ ಮತ್ತು ಧಾರ್ಮಿಕ ವಿಷಯಗಳನ್ನು ಕುರಿತವು. ಹಲವು ಒಗಟುಗಳು ಸಹ ಸರ್ವಜ್ಞನ ತ್ರಿಪದಿಗಳಲ್ಲಿ ಸೇರಿವೆ.
ಸರ್ವಜ್ಞನ ತ್ರಿಪದಿಗಳ ಕೆಲವು ಉದಾಹರಣೆಗಳು:
ಸರ್ವಜ್ಞನೆಂಬುವನು ಗರ್ವದಿಂದಾದವನೇ?
ಸರ್ವರೊಳು ಒಂದೊಂದು ನುಡಿಗಲಿತು
ವಿದ್ಯೆಯ ಪರ್ವತವೆ ಆದ ಸರ್ವಜ್ಞ. 

ಮೂರ್ಖಂಗೆ ಬುದ್ಧಿಯನು ನೂರ್ಕಾಲ ಹೇಳಿದರು 
ಗೋರ್ಕಲ್ಲಮೇಲೆ ಮಳೆಗರೆದರೆ ಆಕಲ್ಲು
ನೀರುಕುಡಿವುದೆ ಸರ್ವಜ್ಞ?

ಸಾಲವನು ಕೊಂಬಾಗ ಹಾಲೋಗರುಂಡಂತೆ 
ಸಾಲಿಗರು ಕೊಂಡು ಎಳೆವಾಗಕಿಬ್ಬಡಿಯ
ಕೀಲು ಮುರಿದಂತೆ ಸರ್ವಜ್ಞ.

ಏಳು ಕೋಟಿಯೆ ಕೋಟಿ, ಏಳು ಲಕ್ಷವೇ ಲಕ್ಷ 
ಏಳು ಸಾವಿರದ ಎಪ್ಪತ್ತು ವಚನಗಳ
ಹೇಳಿದನು ಕೇಳ ಸರ್ವಜ್ಞ.


 
 
************

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ