ನನ್ನ ಪುಟಗಳು

14 ಅಕ್ಟೋಬರ್ 2015

೦೧-ಕುಮಾರವ್ಯಾಸ

ಕುಮಾರವ್ಯಾಸ
 

ಕುಮಾರವ್ಯಾಸನ ಕಾಲ: ಕ್ರಿ.ಶ. ೧೩೫೦-೧೪೦೦
ಸ್ಥಳ : ಗದುಗಿನ ಕೋಳಿವಾಡ (ಈಗಿನ ಧಾರವಾಡ ಜಿಲ್ಲೆ, ಹುಬ್ಬಳ್ಳಿ ತಾಲೂಕಿನ ಕೋಳಿವಾಡ)
ಆರಾಧ್ಯದೈವ: ಗದುಗಿನ ವೀರನಾರಾಯಣ
ಕೃತಿ: ‘ಕರ್ಣಾಟಭಾರತ ಕಥಾಮಂಜರಿ’ ಇದಕ್ಕೆ ಕನ್ನಡಭಾರತ, ಗದುಗಿನ ಭಾರತ ಎಂಬ ಹೆಸರುಗಳೂ ಇವೆ.

ಕುಮಾರವ್ಯಾಸ ಕನ್ನಡದ ಅತ್ಯುನ್ನತ ಕವಿಗಳಲ್ಲಿ ಒಬ್ಬ. ಕನ್ನಡ ಸಾಹಿತ್ಯದ ದಿಗ್ಗಜರಲ್ಲಿ ಒಬ್ಬ ಎಂದರೆ ತಪ್ಪಾಗಲಾರದು. ಕುಮಾರವ್ಯಾಸನ ಮೂಲ ಹೆಸರು ನಾರಣಪ್ಪ. “ಗದುಗಿನ ನಾರಣಪ್ಪ” ಎಂದು ಸಾಮಾನ್ಯವಾಗಿ ಕುಮಾರವ್ಯಾಸ ನನ್ನು ಗುರುತಿಸಲಾಗುತ್ತದೆ. ಈತನ ಕಾವ್ಯ ನಾಮ ಕುಮಾರವ್ಯಾಸ. ವ್ಯಾಸ ಮಹಾಕವಿಯ ಸಂಸ್ಕೃತ ಮಹಾಭಾರತದ ಅತ್ಯದ್ಭುತ ಕನ್ನಡ ರೂಪವನ್ನು ರಚಿಸಿದ್ದರಿಂದ, ವ್ಯಾಸ ಮಹಾಕವಿಯ ಮಾನಸಪುತ್ರ ತಾನೆನ್ನುವ ವಿನೀತ ಭಾವದಿಂದ ನಾರಣಪ್ಪ ಕುಮಾರ ವ್ಯಾಸನಾಗಿದ್ದಾನೆ. ಈ ಹೆಸರು ಕುಮಾರವ್ಯಾಸನಿಗೆ ಅನ್ವರ್ಥವಾಗಿದೆ. ಕುಮಾರವ್ಯಾಸ ಗದುಗಿನ ವೀರನಾರಾಯಣ ದೇಗುಲದಲ್ಲಿನ ಕಂಬದ ಅಡಿಯಲ್ಲೇ ಗದುಗಿನ ಭಾರತವನ್ನು ರಚಿಸಿ ಓದುತ್ತಿದ್ದ ಎಂಬ ಪ್ರತೀತಿ ಸಹ ಇದೆ.

ಕುಮಾರವ್ಯಾಸನ ಕಾಲದ ಬಗ್ಗೆ ಚರ್ಚೆ

  • ಕುಮಾರವ್ಯಾಸನ ಕಾಲದ ಬಗ್ಗೆ ಇನ್ನೂ ಚರ್ಚೆಗಳು ನಡೆಯುತ್ತಲೇ ಇವೆ. ಆದರೂ ಕವಿಚರಿತಾಕಾರರು ಕೆಲವು ಸಾಹಿತ್ಯದ ಹಿನ್ನೆಲೆಯಿಂದ ಕುಮಾರವ್ಯಾಸನ ಕಾಲವನ್ನು ನಿರ್ಣಯಿಸಲು ಪ್ರಯತ್ನಿಸಿದ್ದಾರೆ.
  • ಕುಮಾರವ್ಯಾಸನ ಹೆಸರು ಹೇಳುವ ಉತ್ತರಕಾಲೀನ ಕವಿಗಳಲ್ಲಿ ಮೊದಲಿಗ ತಿಮ್ಮಣ್ಣಕವಿ. ಇವನ ಕಾಲ ಸುಮಾರು ೧೫೧೦. ಇವನು ವಿಜಯನಗರದ ಶ್ರೀಕೃಷ್ಣದೇವರಾಯನ(ಕ್ರಿ.ಶ.೧೫೦೯ ರಿಂದ ೧೫೨೯ರವರೆಗೆ) ಆಜ್ಞಾನುಸಾರ ‘ಕೃಷ್ಣರಾಜ ಭಾರತ’ಎಂಬ ಕೃತಿಯನ್ನು ರಚಿಸಿದ್ದಾನೆ.
  • ಸುಮಾರು ಕ್ರಿ.ಶ. ೧೫೦೦ ರಲ್ಲಿದ್ದ ‘ತೊರವೆ ರಾಮಾಯಣ’ ಬರೆದ ಕುಮಾರ ವಾಲ್ಮೀಕಿ ಅಥವಾ ತೊರವೆ ನರಹರಿ ಮತ್ತು ‘ಕೃಷ್ಣರಾಯ ಭಾರತ’ ಬರೆದ ತಿಮ್ಮಣ್ಣ ಕವಿ ಕುಮಾರವ್ಯಾಸನನ್ನು ಹೊಗಳಿರುವುದರಿಂದ ಕುಮಾರವ್ಯಾಸನು ಆ ಕಾಲಕ್ಕಿಂತ ಹಿಂದಿನವನೆಂದು ಸಿದ್ಧವಾಗಿದೆ.
  • ಜೀವಂಧರ ಚರಿತೆ ಬರೆದ ಕ್ರಿ.ಶ. ೧೪೨೪ ರಲ್ಲಿದ್ದ ಭಾಸ್ಕರ ಕವಿಯು ಕುಮಾರವ್ಯಾಸನ ಅನೇಕ ನುಡಿಕಟ್ಟುಗಳನ್ನು ಬಳಸಿ ಅವನಿಂದ ಪ್ರಭಾವಿತನಾಗಿರುವುದರಿಂದ, ಕುಮಾರವ್ಯಾಸನು ಅವನಿಗಿಂತ ಹಿಂದಿನವನೆಂದು ಸಂಶೋಧಕರು ನಿರ್ಧರಿಸಿದ್ದಾರೆ.
  • ಕುಮಾರವ್ಯಾಸನ ಹೆಸರಿರುವ ಒಂದು ಶಾಸನ ಗದುಗಿನ ವೀರನಾರಾಯಣ ದೇವಸ್ಥಾನಕ್ಕೆ ಸೇರಿದ ಬಾವಿಯ ಎಡಮಗ್ಗುಲ ಗೋಡೆಯ ಮೇಲಿದೆ. ಇದರ ಕಾಲ ಸುಮಾರು ಕ್ರಿ.ಶ. ೨೬-೮-೧೫೩೯ ರಲ್ಲಿ ಬರೆದ ಶಾಸನದಲ್ಲಿ ಕವಿ ಕುಮಾರವ್ಯಾಸಂಗೆ ಪ್ರಸನ್ನನಾದ ಗದುಗಿನ ವೀರ ನಾರಾಯಣನ ಸನ್ನಿಧಿಯಲ್ಲಿ.. ಎಂದು ಕುಮಾರವ್ಯಾಸನ ಹೆಸರನ್ನು ಉಲ್ಲೇಖಿಸಿರುವುದರಿಂದ ಅವನು ಅದಕ್ಕಿಂತ ಹಿಂದಿನವನೆಂದು ಸ್ಪಷ್ಟವಾಗಿದೆ.
  • ಕುಮಾರವ್ಯಾಸ ಶ್ರೀಕೃಷ್ಣದೇವರಾಯನ ಆಳ್ವಿಕೆಯಲ್ಲಿದ್ದವನೆಂದೂ, ‘ಪ್ರಭುಲಿಂಗಲೀಲೆ’ ಬರೆದ ಚಾಮರಸನ ತಂಗಿಯ ಗಂಡನೆಂದೂ, ಇದರ ಪ್ರಕಾರ ಇವನ ಕಾಲ ಸುಮಾರು ೧೪೩೯ ಆಗುತ್ತದೆಂದು ಕವಿಚರಿತಾಕಾರರು ಅಭಿಪ್ರಾಯ ಪಟ್ಟಿದ್ದಾರೆ.
  • ಆದ್ದರಿಂದ ಅವನ-ಕುಮಾರವ್ಯಾಸನ ಕಾಲವನ್ನು ಕ್ರಿ.ಶ. ೧೩೫೦-೧೪೦೦ ಎಂದು ನಿರ್ಣಯಿಸಿರುತ್ತಾರೆ. (ಡಾ.ಟಿ.ವಿ.ವೆಂಕಟಾಚಲಶಾಸ್ತ್ರಿ : ಕುಮಾರವ್ಯಾಸ ಭಾರತ ಸಂಗ್ರಹ ಪ್ರ : ಬಿ.ಎಂ.ಶ್ರೀ. ಪ್ರತಿಷ್ಠಾನ).
  • ಕುಮಾರವ್ಯಾಸನು ‘ಕರ್ಣಾಟ ಭಾರತ ಕಥಾಮಂಜರಿ’ ರಚಿಸಿ, ವ್ಯಾಸರಾಯರಿಗೆ ತೋರಿಸಿದನೆಂಬ ಐತಿಹ್ಯವಿದೆಯೆಂದು ತಿಳಿಸಿರುವ ಪಂಚಮುಖಿ ಎಂಬ ವಿದ್ವಾಂಸರು- “ಹರಿ ಶರಣರೆನ್ನ ಮನೆಯ ಮೆಟ್ಟಲು ಮನೆ ಪರಮಪಾವನವಾಯಿತು” ಎಂಬ ಸುಳಾದಿಯಲ್ಲಿ ಪುರಂದರದಾಸರು ತಮ್ಮ ಮನೆಗೆ ಕುಮಾರವ್ಯಾಸ ಬಂದುದನ್ನು, ಆತ ತನ್ನ ಕೃತಿಗೆ ಶ್ರೀಕೃಷ್ಣನೇ ಕಥಾನಾಯಕನೆಂದು ಶಾಸ್ತ್ರ ಸಮ್ಮತವಾಗಿ ಹೇಳಿದನೆನ್ನಲಾಗಿದೆ.
  • ಈ ದಿಶೆಯಲ್ಲಿ ಕುಮಾರವ್ಯಾಸ ಅತಿ ಪ್ರಾಚೀನನೂ ಅಲ್ಲ, ಅರ್ವಾಚೀನನೂ ಅಲ್ಲ. ಮಧ್ಯಕಾಲದವನೆಂದೂ, ಅವನ ಭಾಷಾಶೈಲಿಯ ದೃಷ್ಠಿಯಿಂದ ನಿರ್ವಿವಾದವಾಗಿ ಹೇಳಬಹುದು.

ಕುಮಾರವ್ಯಾಸನ ಊರು

ಹುಟ್ಟೂರು ಈಗಿನ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಕೋಳೀವಾಡವೆಂಬ ಗ್ರಾಮವೆಂದೂ ಅವನ ವಂಶಸ್ಥರು ಈಗಲೂ ಅಲ್ಲಿ ವಾಸಿಸುತ್ತಾರೆಂದೂ ಹೇಳಲಾಗಿದೆ. ಈ ಬಗ್ಗೆ ಸಂಶೋಧನೆ ಮಾಡಿದ ಶ್ರೀ ಎ.ವಿ.ಪ್ರಸನ್ನ, ಕೆ.ಎ.ಎಸ್. ಅವರು ಅವರ ಮನೆಗೆ ಹೋಗಿ ವಿಚಾರ ವಿನಿಮಯ ಮಾಡಿ ಅವರಲ್ಲಿರುವ ಕಾಗದ ಪತ್ರಗಳನ್ನೂ ಕುಮಾರವ್ಯಾಸ ಭಾರತದ ಓಲೆಗರಿ ಪ್ರತಿಗಳನ್ನೂ ಪರಿಶೀಲಿಸಿರುವುದಾಗಿ ತಿಳಿಸಿದ್ದಾರೆ. ಈ ಎಲ್ಲಾ ಪತ್ರಗಳ ಆಧಾರದ ಮೇಲೆ ಕವಿಯ ವಂಶಸ್ಥರು ತಮ್ಮ ವಂಶದ ಚರಿತ್ರೆಯನ್ನು ಈ ರೀತಿ ತಿಳಿಸುತ್ತಾರೆ. ಕುಮಾರವ್ಯಾಸನ ಪೂರ್ವಿಕರಾದ ಚಿನ್ನದ ಕೈ ಮಾಧವರಸಯ್ಯನು ಹಿರೇಹಂದಿಗೋಳ ಗ್ರಾಮದವನಾಗಿದ್ದು ಕೋಳೀವಾಡ ಗ್ರಾಮವನ್ನು ಕ್ರಯಕ್ಕೆ ಪಡೆದು, ಕೋಳೀವಾಡದಲ್ಲಿಯೇ ನೆಲಸಿದ. ಅವರು ಅದ್ವೈತಿಗಳಾಗಿದ್ದು ಹರಿ-ಹರರಲ್ಲಿ ಅಬೇಧವನ್ನು ಕಾಣುವವರು. ಇವರು ಅಗಸ್ತ್ಯ ಗೋತ್ರಕ್ಕೆ ಸೇರಿದವರು. ಈ ಬಗ್ಗೆ ಗದುಗಿನ ಕುಮಾರವ್ಯಾಸ ಸಂಘದ ಅಧ್ಯಕ್ಷರೂ ಆದ ಶ್ರೀ ಎಂ.ಎಚ್. ಹರಿದಾಸ ಅವರು ರಚಿಸಿರುವ ಮಹಾಕವಿ ಕುಮಾರವ್ಯಾಸ (ಪ್ರ.ವಿಕ್ರಮ ಪ್ರಕಾಶನ ಗದಗ) ಕಿರು ಹೊತ್ತಿಗೆಯಲ್ಲಿ ಹೆಚ್ಚನ ವಿಷಯವಿದೆ. ಅವನ ವಂಶಸ್ಥರಾದ ದತ್ತಾತ್ರೇಯ ಪಾಟೀಲರು ಶ್ರೀ ಎ.ವಿ.ಪ್ರಸನ್ನ ಅವರಿಗೆ ಕೊಟ್ಟ ಕುಮಾರವ್ಯಾಸನ ವಂಶಾವಳಿಯನ್ನು ಗಮಕ ಸಂಪದ ಪತ್ರಿಕೆಯಲ್ಲಿ ಪ್ರಕಟಿಸಿದ್ದಾರೆ. ಒಟ್ಟಿನಲ್ಲಿ ಕವಿ ನಾರಾಯಣಪ್ಪ ಕೋಳಿವಾಡದ ಶಾನುಭೋಗ. ಗದುಗಿನ ವೀರನಾರಾಯಣ ಇವನ ಆರಾಧ್ಯದೈವ. ಇವನಿಗೆ ವೇದವ್ಯಾಸ ಮತ್ತು ಅಶ್ವತ್ಥಾಮರ ಅನುಗ್ರಹವಾಗಿತ್ತೆಂದು ಹೇಳಲಾಗುತ್ತದೆ.

ವಂಶಾವಳಿ

ಈ ವಂಶಾವಳಿಯಂತೆ, ವೀರನಾರಾಯನೆಂಬ ಹೆಸರಿನವರು ಐದು ಜನ ಬರುತ್ತಾರೆ. ಅದರಲ್ಲಿ ವಂಶ ಪ್ರವರ್ತಕ ಚಿನ್ನದ ಕೈ ಮಾಧವರಸಯ್ಯನ ನಂತರ ನಾಲ್ಕನೆಯವನಿಗೆ ೧ನೇ ವೀರನಾರಾಯಣ ಗೌಡ ಎಂದಿದೆ. ಅವನೇ ಕುಮಾರವ್ಯಾಸನೆಂದು ನಿರ್ಧರಿಸಿದ್ದಾರೆ. ಇಲ್ಲಿ ಗೌಡ ಎಂಬ ಪದ ಜಾತಿ ಸೂಚಕವಲ್ಲ. ಅದು ಗ್ರಾಮವೃದ್ಧ > ಗಾಮುಂಡ > ಗೌಡ ಎಂದು ನಿರ್ಣಯಿಸಿದ್ದಾರೆ. ಆನವ್ಮತರ ಕೆಲವು ಅದೇ ಮನೆತನದವರು ಅಯ್ಯ, ಪಾಟೀಲ ಎಂದು ತಮ್ಮ ಹೆಸರಿನ ಕೊನೆಗೆ ಸೇರಿಸಿ ಕೊಂಡಿದ್ದಾರೆ. ವಂಶ ಪ್ರವರ್ತಕ ಚಿನ್ನದ ಕೈ ಮಾಧವರಸಯ್ಯನ ಕಾಲ ಕ್ರಿ.ಶ. ೧೧೪೮. ಇವನ ನಂತರದ ನಾಲ್ಕನೆಯ ತಲೆಮಾರಿನವ ಕುಮಾರವ್ಯಾಸ. ಪ್ರತಿ ತಲೆಮಾರಿಗೆ ೨೫ ವರ್ಷವೆಂದು ಹಿಡಿದರೆ, ಕುಮಾರವ್ಯಾಸನ ಕಾಲ ಕ್ರಿ.ಶ. ೧೨೪೮ . ಅವನು ಸುಮಾರು ೭೦ ವರ್ಷ ಬದುಕಿದ್ದನೆಂದು ಭಾವಿಸಿದರೂ ಕ್ರಿ.ಶ. ೧೨೪೮ ರಿಂದ ೧೩೧೮ ಎಂದರೆ ೩೦-೪೦ ವರ್ಷ ವ್ಯತ್ಯಾಸ ಬರುತ್ತದೆ.
  • ವಂಶಾವಳಿ :
  • ||ಶ್ರೀ ವೀರನಾರಾಯಣ ಪ್ರಸನ್ನಃ||
  • ೧.ವಂಶ ಪ್ರವರ್ತಕ ಚಿನ್ನದ ಕೈ ಮಾಧವರಸಯ್ಯ.
  • ೨.ತಿರುಮಲಯ್ಯ.
  • ೩. ಲಕ್ಕರಸಯ್ಯ.
  • ೪.ವೀರನಾರಾಯಣ ಗೌಡ.; ಕೃಷ್ಣರಸಯ್ಯ ; ತಂಕರಸಯ್ಯ ; ತಿರುಮಲಯ್ಯ. ಅಶ್ಯತ್ಥಯ್ಯ ?
  • ೪-೧ ನೇ ವೀರನಾರಾಯಣ ನೇ ಕುಮಾರವ್ಯಾಸ
  • ನಂತರ ೧೯೪೧ ಕ್ಕೆ ೧೯ ತಲೆಮಾರಿನ ಪಟ್ಟಿ ಇದೆ

ಕೃತಿಗಳು

ಕುಮಾರವ್ಯಾಸನ ಅತಿ ಪ್ರಸಿದ್ಧ ಕೃತಿ ಕರ್ಣಾಟ ಭಾರತ ಕಥಾಮಂಜರಿ. ಇದಕ್ಕೆ ಗದುಗಿನ ಭಾರತ, ಕನ್ನಡ ಭಾರತ, ಕುಮಾರವ್ಯಾಸ ಭಾರತ ಎಂದೂ ಹೆಸರು. ಮಹಾಕವಿ ವ್ಯಾಸರ ಸಂಸ್ಕೃತ ಮಹಾಭಾರತದ ಕನ್ನಡಾನುವಾದ ಎನ್ನಬಹುದು. ಆದರೆ ಕೇವಲ ಅನುವಾದವಾಗಿ ಉಳಿಸದೆ ಕುಮಾರವ್ಯಾಸ ತನ್ನ ಕಾವ್ಯಸಾಮರ್ಥ್ಯವನ್ನು ಈ ಕೃತಿಯಲ್ಲಿ ಸಂಪೂರ್ಣವಾಗಿ ಧಾರೆಯೆರೆದಿದ್ದಾನೆ. ಕನ್ನಡ ಸಾಹಿತ್ಯದಲ್ಲಿ ಮೇರುಕೃತಿಯಾಗಿ ಪರಿಗಣಿತವಾಗಿರುವ ಕನ್ನಡ ಭಾರತ, ಸಂಸ್ಕೃತ ಮಹಾಭಾರತದ ಮೊದಲ ಹತ್ತು ಪರ್ವಗಳು, ೧೪೭ ಸಂಧಿ, ೭೯೭೧ ಪದ್ಯಗಳನ್ನು ಒಳಗೊಂಡಿದೆ. ‘ಕುಮಾರವ್ಯಾಸ ಭಾರತ’ದ ಭಾಷೆ ನಡುಗನ್ನಡ.
ಸಂಪೂರ್ಣ ಕಾವ್ಯ ಭಾಮಿನೀ ಷಟ್ಪದಿ ಛಂದಸ್ಸಿನಲ್ಲಿ ರಚಿತವಾಗಿದ್ದು ಕುಮಾರವ್ಯಾಸನ ಕಾವ್ಯ ಪ್ರತಿಭೆ ಓದುಗರನ್ನು ದಂಗುಬಡಿಸುತ್ತದೆ. ಅವನ ಕಾವ್ಯಪ್ರತಿಭೆ ಪೂರ್ಣಶಕ್ತಿಯಲ್ಲಿ ಹೊರಹೊಮ್ಮುವುದು ಅವನ ರೂಪಕಗಳಲ್ಲಿ. ಕುಮಾರವ್ಯಾಸನ ರೂಪಕಗಳ ವೈವಿಧ್ಯತೆ ಮತ್ತು ಆಳ ಅಪಾರವಾದದ್ದು. ಇದೇ ಕಾರಣಕ್ಕಾಗಿ ಕುಮಾರವ್ಯಾಸನ ಹೆಸರು ರೂಪಕ ಸಾಮ್ರಾಜ್ಯ ಚಕ್ರವರ್ತಿ ಎಂದೇ ಖ್ಯಾತಿ ಪಡೆದಿದೆ. ಉದಾಹರಣೆಗೆ ಪರಿಶೀಲಿಸಿ:
  • “ಬವರವಾದರೆ ಹರನ ವದನಕೆ ಬೆವರ ತಹೆನು” (ಅಭಿಮನ್ಯುವಿನ ವೀರೋಕ್ತಿ!)
  • “ನರಶರದ ಜುಂಜುವೊಳೆಯಲಿ ಜಾರುವನೆ ಜಾಹ್ನವೀಧರ” (ಕಿರಾತಾರ್ಜುನೀಯ ಪ್ರಸಂಗದಲ್ಲಿ)
  • “ಜವನ ಮೀಸೆಯ ಮುರಿದನೋ” (ಉತ್ತರನ ಪೌರುಷದಲ್ಲಿ)
  • “ಅರಿವಿನ ಸೆರಗು ಹಾರಿತು”
ರೂಪಕಗಳೊಂದಿಗೆ ಕುಮಾರವ್ಯಾಸನ ಇನ್ನೊಂದು ಸಾಮರ್ಥ್ಯ ಮಾನವಪ್ರಕೃತಿಯ ವರ್ಣನೆ. ಕುಮಾರವ್ಯಾಸನ ಪಾತ್ರಗಳು ಕಣ್ಣಿಗೆ ಕಟ್ಟುವಷ್ಟು ಸ್ಪಷ್ಟ. ಅವನ ಎಲ್ಲ ಪಾತ್ರಗಳು ಅವರವರದೇ ರೀತಿಯಲ್ಲಿ ಮಾತನಾಡುತ್ತಾರೆ, ಬೈಯುತ್ತಾರೆ, ನಗುತ್ತಾರೆ, ಹಾಗೂ ಅಳುತ್ತಾರೆ ಸಹ. ಕುಮಾರವ್ಯಾಸ ಅಷ್ಟೇ ಆಳವಾದ ದೈವಭಕ್ತ ಸಹ. ಶ್ರೀ ಕೃಷ್ಣನ ವರ್ಣನೆ ಅವನ ಕಾವ್ಯರಚನೆಯ ಮೂಲೋದ್ದೇಶಗಳಲ್ಲಿ ಒಂದು. (“ತಿಳಿಯ ಹೇಳುವೆ ಕೃ‍ಷ್ಣ ಕಥೆಯನು”) ಅವನ ಮಹಾಭಾರತ ಕಥೆ ಕೃಷ್ಣನ ಸುತ್ತಲೂ ಸುತ್ತುತ್ತದೆ. ಕುಮಾರವ್ಯಾಸ ಕೃಷ್ಣನ ಭಕ್ತ. ಮಹಾಭಾರತದ ಹದಿನೆಂಟು ಪರ್ವಗಳಲ್ಲಿ ಹತ್ತರ (ಗದಾಪರ್ವ) ವರೆಗೆ. ಬರೆದು ದುರ್ಯೋಧನನ ಅವಸಾನದ ನಂತರ, ಕುಮಾರವ್ಯಾಸನು ಮುಂದೆ ಸಂಕ್ಷಿಪ್ತವಾಗಿ, ಶ್ರೀಕೃಷ್ಣನು ಧರ್ಮರಾಜನಿಗೆ ಪಟ್ಟಾಭಿಷೇಕವನ್ನು ಮಾಡಿಸಿ ದ್ವಾರಕೆಗೆ ಹಿಂದಿರುಗುವವರೆಗೆ ಬರೆದಿದ್ದಾನೆ;
ಕುಮಾರವ್ಯಾಸನ ಪ್ರತಿಭೆಗೆ ಕನ್ನಡಿಯಾಗಿ ಹಿಡಿದ ಕುವೆಂಪು ರವರ ಸಾಲುಗಳನ್ನು ನೋಡಿ:
ಕುಮಾರ ವ್ಯಾಸನು ಹಾಡಿದನೆಂದರೆ
ಕಲಿಯುಗ ದ್ವಾಪರವಾಗುವುದು
ಭಾರತ ಕಣ್ಣಲಿ ಕುಣಿವುದು! ಮೈಯಲಿ
ಮಿಂಚಿನ ಹೊಳೆ ತುಳುಕಾಡುವುದು!
  • ಕುಮಾರವ್ಯಾಸನ ಇನ್ನೊಂದು ಕೃತಿ ಐರಾವತ. ಇದು ಅಷ್ಟಾಗಿ ಪ್ರಸಿದ್ಧವಾಗಿಲ್ಲ.

ಪ್ರಭಾವ

ಕುಮಾರವ್ಯಾಸ ಕನ್ನಡ ಸಾಹಿತ್ಯದ ಬೆಳವಣಿಗೆಯ ಮೇಲೆ ಬಹಳಷ್ಟು ಪ್ರಭಾವ ಬೀರಿದ್ದಾನೆ. ಕುಮಾರವ್ಯಾಸ ಭಾರತವನ್ನು ಇಂದಿಗೂ ಸಹ ಕರ್ನಾಟಕದಲ್ಲಿ ಓದಲಾಗುತ್ತದೆ, ವ್ಯಾಖ್ಯಾನ ಮಾಡಲಾಗುತ್ತದೆ. ಕುಮಾರವ್ಯಾಸ ಭಾರತವನ್ನು ಓದುವ ಒಂದು ವಿಶಿಷ್ಟ ಶೈಲಿಯಾದ ಗಮಕ ಕಲೆ ಸಾಕಷ್ಟು ಪ್ರಸಿದ್ಧವಾಗಿದೆ.

“ಹಲಗೆ ಬಳಪವ ಪಿಡಿಯದೊಂದ
ಗ್ಗಳಿಕೆ ಪದವಿಟ್ಟಳುಪದೊಂದ
ಗ್ಗಳಿಕೆ ಪರರೊಡ್ಡವದ ರೀತಿಯ ಕೊಳ್ಳದಗ್ಗಳಿಕೆ
ಬಳಸಿ ಬರೆಯಲು ಕಂಠಪತ್ರದ
ವುಲುಹುಗೆಡದಗ್ಗಳಿಕೆಯೆಂಬೀ
ಬಲುಹು ವೀರನಾರಾಯಣನ ಕಿಂಕರಗೆ”
 
“ವೀರನಾರಾಯಣನೆ ಕವಿ ಲಿಪಿ
ಕಾರ ಕುಮಾರವ್ಯಾಸ ಕೇಳುವ
ಸೂರಿಗಳು ಸನಕಾದಿಗಳು ಜಂಗಮ ಜನಾರ್ಧನರು
ಚಾರು ಕವಿತೆಯ ಬಳಕೆಯಲ್ಲ ವಿ
ಚಾರಿಸುವಡಳವಲ್ಲ ಚಿತ್ತವ
ಧಾರು ಹೋ ಸರ್ವಜ್ಞರಾದರು ಸಲುಗೆ ಬಿನ್ನಪವ”

ಕುಮಾರವ್ಯಾಸನ ಮಂಡಿಗೆಗಳು
ಕುಮಾರವ್ಯಾಸನು ತನ್ನ ಕಾವ್ಯದಲ್ಲಿ ಕೆಲವು ಒಗಟು ಪದ್ಯಗಳನ್ನು ಬಳಸಿದ್ದಾನೆ. ಅವಕ್ಕೆ ಮಂಡಿಗೆಗಳೆಂದು(೧) ಕರೆಯುತ್ತಾರೆ ಅವು ವ್ಯಾಖ್ಯಾನ ಮಾಡುವವರಿಲ್ಲದಿದ್ದರೆ ಅರ್ಥವಾಗುವುದು ಕಷ್ಟ. 
ಕುಮಾರವ್ಯಾಸನ 'ಮಂಡಿಗೆ' ಗಳು -ಅಥವಾ ಒಗಟು ಪದ್ಯಗಳು ; ಕುಮಾರವ್ಯಾಸ ಭಾರತದಲ್ಲಿ ಅನೇಕ ಮಂಡಿಗೆಗಳು ಅಥವಾ ಒಗಟು ಪದ್ಯಗಳಿವೆ. ಅವಕ್ಕೆ ಅರಿತ ವ್ಯಾಖ್ಯಾನ ಕಾರರಿಲ್ಲದಿದ್ದರೆ ಅರ್ಥ ವಾಗುವುದುಕಷ್ಟ. : ಉದಾಹರಣೆಗೆ :-
ಪದ್ಯ :-
ವೇದ ಪುರುಷನ ಸುತನ ಸುತನ ಸ
ಹೋದರನ ಹೆಮ್ಮಗನ ಮಗನ ತ
ಳೋದರಿಯ ಮಾತುಳನ ರೂಪನನತುಳ ಭುಜ ಬಲದಿ |
ಕಾದಿ ಗೆಲಿದನಣ್ಣನವ್ವೆಯ
ನಾದಿನಿಯ ಜಠರದಲಿ ಜನಿಸಿದ
ನಾದಿ ಮೂರುತಿ ಸಲಹೊ ಗದುಗಿನ ವೀರನಾರಯಣ ||


ಪದ ವಿಂಗಡನೆ :
ವೇದ ಪುರುಷನ ಸುತನ ಸುತನ ಸ
ಹೋದರನ ಮೊಮ್ಮಗನ ಮಗನ ತಳೋದರಿಯ
ಮಾತುಳನ ರೂಪನನು ಅತುಳ ಭುಜ ಬಲದಿ
ಕಾದಿ ಗೆಲಿದನ ಅಣ್ಣನ ಅವ್ವೆಯ
ನಾದಿನಿಯ ಜಠರದಲಿ ಜನಿಸಿದ
ಅನಾದಿ ಮೂರುತಿ ಸಲಹೊ ಗದುಗಿನ ವೀರನಾರಯಣ

- ಅರ್ಥ:-
ವೇದ ಪುರುಷನ -ನಾರಾಯಣನ ; ಸುತನ -ಬ್ರಹ್ಮನ ;
ಸುತನ -ನಾರದನ ; ಸಹೋದರನ - ಮರೀಚಿಯ ;
ಹೆಮ್ಮಗನ - ಇಂದ್ರನ (ಮರೀಚಿಯ ಮೊಮ್ಮಗ)

(ಬ್ರಹ್ಮನ ಮಗ ಮರೀಚಿ, ಮರೀಚಿಯ ಮಗ ಕಶ್ಯಪ -ಅವನ ಮಗ ಇಂದ್ರ )

ಮಗನ - ಅರ್ಜುನನ ; (ಇಂದ್ರನ ಮಗ-ಅರ್ಜುನ)
ತಳೋದರಿಯ - ಸುಭದ್ರೆಯ : ಮಾತುಳನ -ಮಾವನ ಕಂಸನ
(ಎಂದರೆ ಸುಭದ್ರೆಯ ತಾಯಿ ದೇವಕಿ -ದೇವಕಿಯ ತಂದೆ ದೇವಕ,
ದೇವಕನ ಅಣ್ಣ ಉಗ್ರಸೇನ , ಉಗ್ರಸೇನನ ಮಗ ಕಂಸ ;
ಆದ್ದರಿಂದ ದೇವಕಿಗೆ ಕಂಸ ಅಣ್ಣ -ದೊಡ್ಡಪ್ಪನ ಮಗ ;
ಸುಭದ್ರೆಗೆ ದೇವಕಿಯ ಅಣ್ಣ ಕಂಸ ಸೋದರಮಾವ ; )
ರೂಪನನು - ಕಂಸನಿಗೆ ಸರಿಸಮಾನನು - ಜರಾಸಂಧನನ್ನು ;
ಅತುಳ ಭುಜ ಬಲದಿ - ಅಸಾಧಾರಣ ಭುಜ ಬಲದಿಂದ ;
ಕಾದಿ ಗೆಲಿದನ - ಯುದ್ಧ ಮಾಡಿ ಗೆದ್ದವನ -ಭೀಮನ  ; ಅಣ್ಣನ -ಯುಧಿಷ್ಠಿರನ ;
ಅವ್ವೆಯ - ತಾಯಿಯ ಎಂದರೆ ಕುಂತಿಯ ; ನಾದಿನಿಯ - ದೇವಕಿಯ
(ಕುಂತಿಯ ತಮ್ಮ ವಸುದೇವ , ತಮ್ಮನ ಹೆಂಡತಿ - ನಾದಿನಿ-
ನಾದಿನಿಯು -ವಸುದೇವನ ಪತ್ನಿ ದೇವಕಿ) ;
ನಾದಿನಿಯ ಜಠರದಲಿ ಜನಿಸಿದ -
ದೇವಕಿಯ ಗರ್ಭದಲ್ಲಿ ಜನಿಸಿದ ;
ಅನಾದಿ ಮೂರುತಿ -ಆದಿ ಇಲ್ಲದ ದೇವ ;(ಕೃಷ್ಣ )
ಸಲಹೊ - ಕಾಪಾಡು ; ಗದುಗಿನ ವೀರನಾರಯಣ -
ಗದುಗಿನ ದೇವಾಲಯದಲ್ಲಿರುವ - ವೀರ ನಾರಾಯಣ .

ಪದ್ಯ ೨
ಒಂದರಿಂದೆರಡಹುದನರಿ ಮೂ
ರಂದವನು ತಿಳಿ ನಾಲ್ಕರಲಿ ಮನ
ಗುಂದದಿರೈದರಲಿ ವರ್ಜಿಪುದಾರೇಳರಲಿ |
ಒಂದಿಸದಿರೆಂಟನು ವಿಚಾರಿಸಿ
ಮುಂದುವರಿದೊಂಭತ್ತರಲಿ ಮನ
ಗುಂದಿಸದೀರೈದರಲಿ ಭೂಪಾಲ ಕೇಳೆಂದ||

 
ಪದ ವಿಂಗಡಣೆ :
ಒಂದರಿಂದ ಎರಡು ಅಹುದನು ಅರಿ, ಮೂರು ಅಂದವನು ತಿಳಿ,
ನಾಲ್ಕರಲಿ ಮನ , ಕುಂದದಿರು, ಐದರಲಿ , ವರ್ಜಿಪುದು
ಆರು ಏಳರಲಿ ಒಂದಿಸದಿರು, ಎಂಟನು ವಿಚಾರಿಸಿ ,
ಮುಂದುವರಿದು ಒಂಭತ್ತರಲಿ, ಮನ ಕುಂದಿಸದಿರು ಈರು ಐದರಲಿ,
ಭುಪಾಲ ಕೇಳು ಎಂದ.

ಅರ್ಥ:
ಒಂದರಿಂದ - ಮೂಲ ಚೈತನ್ಯವಾದ ಆ ಪರಬ್ರಹ್ಮ ದಿಂದ ;
ಎರಡು ಅಹುದನು ಅರಿ - ಪರಮಾತ್ಮ ಜೀವಾತ್ಮ ವಾಗಿ
ಈ ಮಾನವ ಸೃಷ್ಟಿಯಾಗಿರುವುದನ್ನು ತಿಳಿ ;
ಮೂರು ಅಂದವನು ತಿಳಿ - ಈ ಜಗತ್ತಿನ ನಡವಳಿಕೆಗೆ ಸತ್ವ, ರಜ,,ತಮ,
ಈ ಮೂರು ಗಣ ತ್ರಯಗಳು ಕಾರಣವೆಂಬುದನ್ನು ತಿಳಿದುಕೋ ;
ನಾಲ್ಕರಲಿ ಮನ - ಧರ್ಮ,ಅರ್ಥ, ಕಾಮ, ಮೋಕ್ಷ ಈನಾಲ್ಕರಲ್ಲೂ ಮನಸ್ಸಿರಲಿ,
ಅವನ್ನು ಸಾಧಿಸಬೇಕೆಂಬ ಗುರಿ ಇರಲಿ ;
ಕುಂದದಿರು, ಐದರಲಿ - ಪಂಚೇಂದ್ರಿಗಳಿಗೆ (ನೇತ್ರಗಳು, ನಾಸಿಕ, ಶ್ರೋತೃ/ ಕಿವಿ , ಜಿಹ್ವಾ/ನಾಲಿಗೆ, ತ್ವಕ್ / ಚರ್ಮ) ;
ವರ್ಜಿಪುದು -ಇವುಗಳಿಗೆ ವಶನಾಗಬೆಡ ;
ಆರು ಏಳರಲಿ -ಅರಿಷಡ್ವರ್ಗಗಳನ್ನೂ (ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರ) ಮತ್ತು ಸಪ್ತ ವ್ಯಸನ ಗಳಾದ ಸ್ತ್ರೀ,ಅಕ್ಷ, ಮೃಗಯೆ, ಪಾನ, ವಾಕ್ಪಾರುಷ್ಯ , ಅರ್ಥದೂಷಣೆ , ದಂಡಪಾರುಷ್ಯ -ಇವುಗಳಿಂದ ; ಒಂದಿಸದಿರು - ದೂರವಿರು, ;
ಎಂಟನು ವಿಚಾರಿಸಿ - ಅಷ್ಠಾಂಗ ಯೋಗವನ್ನು ಅರಿತು (ಯಮ,ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧ್ಯಾನ,ಧಾರಣ, ಸಮಾಧಿ) ;
ಮುಂದುವರಿದು ಒಂಭತ್ತರಲಿ - ನವ ವಿಧ ಭಕ್ತಿಯಲ್ಲಿ (ಶ್ರವಣ, ಸ್ಮರಣ, ಕ್ಭಿರ್ತನ, ವಂದನ, ಅರ್ಚನ, ಪಾದ ಸೇವನ, ಸಖ್ಯ, ದಾಸ್ಯ, ಆತ್ಮ ನಿವೇದನ) ಮನಸ್ಸನ್ನಿಡು (ಮುಂದುವರಿ) ;
ಮನ ಕುಂದಿಸದಿರು ಈರು ಐದರಲಿ, (ಎರಡು+ಐದು=ಹತ್ತು) ; ಇವುಗಳ ಜೊತೆಯಲ್ಲಿ ಕ್ಷಮೆ, ಮಾರ್ದವತೆ, ಆರ್ಜವ (ಪ್ರಾಮಣಿಕತೆ), ಶೌಚ, ಸತ್ಯ,ಸಂಯಮ, ತಪಸ್ಸು (ಶುದ್ಧ ಚಿಂತನೆ), ತ್ಯಾಗ, ಪರದ್ರವ್ಯದಲ್ಲಿ ಅನಪೇಕ್ಷೆ, ಬ್ರಹ್ಮಚರ್ಯ ಈ ಹತ್ತು ಸಾಮಾನ್ಯ ಧರ್ಮಗಳನ್ನು ;
ಮನ ಕುಂದದಿರು -ಬಿಡದೆ ಅನುಸರಿಸು
ಭೂಪಾಲ ಕೇಳು ಎಂದ.
ಈ ಪದ್ಯಕ್ಕೆ ರಾಜನೀತಿಗೆ ಅನುಗುಣವಾಗಿ ಬೇರೊಂದು ಬಗೆಯ ಅರ್ಥವನ್ನೂ ಹೇಳುತ್ತಾರೆ

ಪದ್ಯ ೨ರ ಅರ್ಥ- ರಾಜ ನೀತಿಯ ಪ್ರಕಾರ

ಒಂದರಿಂದ -ಬುದ್ಧಿ ಅಥವಾ ವಿವೇಕದಿಂದ,
ಎರಡನು -ಕರ್ತವ್ಯ ಮತ್ತು ಅಕರ್ತವ್ಯಗಳನ್ನು
ಅರಿ -ವಿಚಾರ ಮಾಡು,
ಮೂರು ಅಂದವನು ತಿಳಿ - ಸತ್ರುಗಳು ಯಾರು, ಮಿತ್ರರು ಯಾರು , ಉದಾಸೀನರು ಯಾರುಎಂಬುದನ್ನು ಅರಿತು,
ನಾಲ್ಕರಲಿ - ಸಾಮ, ದಾನ, ಬೇಧ, ದಂಡ ವೆಂಬ ಚತುರೋಪಾಯಗಳನ್ನು ಸೂಕ್ತ ರೀತಿಯಲ್ಲಿ ಉಪಯೋಗಿಸು,
ಮನಗುಂದದಿರು ಐದರಲಿ - ಪಂಚೇಂದ್ರಿಗಳಿಗೆ ವಶನಾಗ ಬೇಡ,
ಆರನು - ಸಂಧಿ, ವಿಗ್ರಹ, ಯಾನ, ಆಸನ, ದ್ವೈದೀ ಭಾವ, ಸಮಾಶ್ರಯ, ಎಂಬ ರಾಜನೀತಿಯನ್ನು ಸಮಯಾನುಸಾರ ಉಪಯೋಗಿಸಿ,
ವರ್ಜಿಪುದು ಏಳರಲಿ - ಸ್ತ್ರೀ , ಜೂಜು , ಬೇಟೆ, ಮದ್ಯ, ಕಠೋರ ವಚನ, ಕ್ರೂರ ದಂಡನೆ, ದುಂದುಗಾರಿಕೆ, ಈ ಸಪ್ತ ವ್ಯಸನ ಗಳಿಂದ ದೂರವಿರು.
ಹೀಗೆ ಮನಸ್ಸನು ಹಿಡಿತದಲ್ಲಿ ಇಟ್ಟುಕೊಂಡು,
ಅಷ್ಟಾಂಗ ಯೋಗವನ್ನು ಸಾಧನೆ ಮಾಡಿ, ನವ ವಿಧ ಭಕ್ತಿಯನ್ನು ರೂಡಿಸಿಕೊಂಡು, ದಶ ಧರ್ಮಗಳನ್ನು ಪಾಲಿಸು, ಇದರಿಂದ ಮಾನಸಿಕ ನೆಮ್ಮದಿ ದೊರಕುವುದು.
 ****************

ಕುಮಾರವ್ಯಾಸ ಕಂಬ
 ******************
ಮಾಹಿತಿ ಕೃಪೆ: ವಿಕಿಪೀಡಿಯಾ 
******************

ನಡುಗನ್ನಡದ ಕವಿಗಳು (ಕುಮಾರವ್ಯಾಸ ಯುಗ)




ಕವಿ-ಸಾಹಿತಿಗಳ ಪರಿಚಯ
ನಡುಗನ್ನಡದ ಕವಿಗಳು (ಕುಮಾರವ್ಯಾಸ ಯುಗ)
ಕ್ರ. ಸಂ.
ಹೆಸರು
೩೬
ವಿರೂಪಾಕ್ಷಪಂಡಿತ
೩೭
ಭಟ್ಟಾಕಳಂಕ
೩೮
ಗೋವಿಂದವೈದ್ಯ(ಭಾರತಿನಂಜ)
೩೯
ಗೋಪಕವಿ(ಗೋವಿಂದ)
೪೦
ನಾಗರಸ
೪೧
ಷಡಕ್ಷರದೇವ
೪೨
ಚಿಕ್ಕದೇವರಾಜ
೪೩
ತಿರುಮಲಾರ್ಯ
೪೪
ಚಿಕ್ಕುಪಾಧ್ಯಾಯ
೪೫
ಮಹಲಿಂಗರಂಗ
೪೬
ಸಿಂಗರಾರ್ಯ
೪೭
ಸಂಚಿಹೊನ್ನಮ್ಮ
೪೮
ಚಿದಾನಂದಾವಧೂತ
೪೯
ಹೆಳವನಕಟ್ಟೆ ಗಿರಿಯಮ್ಮ
೫೦
ಲಿಂಗಣ್ಣ
೫೧
ಜಗನ್ನಾಥದಾಸ
೫೨
ದೇವಚಂದ್ರ
೫೩
ಮುಮ್ಮಡಿ ಕೃಷ್ಣರಾಜ
೫೪
ಕೆಂಪುನಾರಾಯಣ
೫೫
ಅಳಿಯಲಿಂಗರಾಜ