ನನ್ನ ಪುಟಗಳು

24 ಏಪ್ರಿಲ್ 2021

ಡಾ.ರಾಜಕುಮಾರ್ ಜೀವನದ ಯಶೋಗಾಥೆ

 ವರನಟ ಡಾ.ರಾಜಕುಮಾರ

ಡಾ.ರಾಜಕುಮಾರ್

ಆಡು ಮುಟ್ಟದ ಸೊಪ್ಪಿಲ್ಲ; ಅಣ್ಣಾವ್ರು ಮಾಡದ ಪಾತ್ರವಿಲ್ಲ ನಟರಾಗಿ, ಹಿನ್ನೆಲೆ ಗಾಯಕರಾಗಿ, ಕನ್ನಡ ಸಂಸ್ಕೃತಿಯ ಪ್ರತಿಬಿಂಬವಾಗಿ ಇಡೀ ದೇಶದಲ್ಲಿ ಖ್ಯಾತಿವೆತ್ತ ಹೃದಯವಂತ ನಟ ಡಾ.ರಾಜಕುಮಾರ್. ಭಾರತೀಯ ಚಿತ್ರರಂಗ ನೂರು ವರ್ಷ ಪೂರೈಸಿದ ಸಂದರ್ಭದಲ್ಲಿ ಫೋರ್ಬ್ಸ್ ಪತ್ರಿಕೆಯು ಪ್ರಕಟಿಸಿರುವ 25 ಅತ್ಯದ್ಭುತ ನಟನೆಗಳ ಪಟ್ಟಿಯಲ್ಲಿ ಡಾ. ರಾಜ್ ಕುಮಾರ್ ಅವರ ಬಂಗಾರದ ಮನುಷ್ಯ ಚಿತ್ರದ ನಟನೆಯೂ ಒಂದಾಗಿದೆ.

 ಕನ್ನಡ ರಂಗಭೂಮಿಯ ಹೆಸರಾಂತ ಪ್ರತಿಭೆ ಸಿಂಗನಲ್ಲೂರು ಪುಟ್ಟಸ್ವಾಮಯ್ಯ ಮತ್ತು ಲಕ್ಷ್ಮಮ್ಮ ದಂಪತಿಗಳ ಹಿರಿಯ ಮಗನಾಗಿ, ಚಾಮರಾಜನಗರ ಜಿಲ್ಲೆಯ ಗಡಿಭಾಗದಲ್ಲಿರುವ ದೊಡ್ಡ ಗಾಜನೂರಿನಲ್ಲಿ ೧೯೨೯ರ ಏಪ್ರಿಲ್ ೨೪ರಂದು ರಾಜ್‌ಕುಮಾರ್ ಹುಟ್ಟಿದರು. ನಾಮಕರಣಗೊಂಡ ಹೆಸರು ಮುತ್ತುರಾಜು(ಮುತ್ತಣ್ಣ).

ಡಾ. ರಾಜ್ ಅವರಿಗೆ ವರದರಾಜ್ ಎಂಬ ಸಹೋದರರೂ, ಶಾರದಮ್ಮ ಎಂಬ ತಂಗಿಯೂ ಇದ್ದರು. ೧೯೫೩ ಜೂನ್ ೨೫ರಂದು ಪಾರ್ವತಿಯವರೊಡನೆ ಲಗ್ನವಾಯಿತು. ಪಾರ್ವತಿಯವರು ಮುಂದೆ ಪಾರ್ವತಮ್ಮ ರಾಜ್‌ಕುಮಾರ್ ಎಂದೇ ಕನ್ನಡದ ಜನತೆಗೆ ಚಿರ ಪರಿಚಿತರಾಗಿ ಕನ್ನಡ ಚಿತ್ರರಂಗದ ಪ್ರಮುಖ ಚಿತ್ರ ನಿರ್ಮಾಪಕರಲ್ಲೊಬ್ಬರಾದರು. ವಜ್ರೇಶ್ವರಿ ಸಂಸ್ಥೆಯ ಅಡಿಯಲ್ಲಿ ಹಲವಾರು ಕನ್ನಡ ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ. ಡಾ. ರಾಜ್ ದಂಪತಿಗಳಿಗೆ ೫ ಜನ ಮಕ್ಕಳು. ಮೂರು ಜನ ಗಂಡು ಮಕ್ಕಳು ಮತ್ತು ಇಬ್ಬರು ಹೆಣ್ಣು ಮಕ್ಕಳು. ಗಂಡು ಮಕ್ಕಳಾದ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಮತ್ತು ಪುನೀತ್ ರಾಜ್‌ಕುಮಾರ್ ಕನ್ನಡ ಚಿತ್ರರಂಗದ ನಾಯಕ ನಟರು. ಹೆಣ್ಣು ಮಕ್ಕಳು ಪೂರ್ಣಿಮಾ ಹಾಗು ಲಕ್ಷ್ಮಿ. ಹಿರಿಯ ಅಳಿಯ ಪಾರ್ವತಮ್ಮನವರ ತಮ್ಮನಾದ ಗೋವಿಂದರಾಜು ಹಾಗು ಕಿರಿಯ ಅಳಿಯ ಚಿತ್ರನಟ ರಾಮ್‌ಕುಮಾರ್. ಒಟ್ಟು ಹನ್ನೆರಡು ಮೊಮ್ಮಕ್ಕಳಿದ್ದು, ಶಿವರಾಜ್‌ಕುಮಾರ್ ಪುತ್ರಿಯಾದ ನಿವೇದಿತಾ, ಅಂಡಮಾನ್ ಮುಂತಾದ ಕೆಲವು ಚಿತ್ರಗಳಲ್ಲಿ ಬಾಲನಟಿಯಾಗಿ ನಟಿಸಿದ್ದಾಳೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಡಾ. ರಾಜ್ ಅವರ ಬೀಗರು. ಬಂಗಾರಪ್ಪನವರ ಪುತ್ರಿಯಾದ ಗೀತಾ, ಶಿವರಾಜ್‌ಕುಮಾರ್ ಅವರ ಪತ್ನಿ.

 ನರಹಂತಕ ವೀರಪ್ಪನ್‌ನಿಂದ ಡಾ.ರಾಜ್ ಅಪಹರಣ

೩೦ ಜುಲೈ ೨೦೦೦ರಂದು, ಕುಖ್ಯಾತ ದಂತಚೋರ, ನರಹಂತಕ ವೀರಪ್ಪನ್‌ನಿಂದ ಡಾ. ರಾಜ್ ಅವರು ಗಾಜನೂರಿನಲ್ಲಿರುವ ತಮ್ಮ ತೋಟದ ಮನೆಯಿಂದ ಅಪಹರಣವಾದರು. ಡಾ. ರಾಜ್ ಅವರೊಂದಿಗೆ ಅವರ ಅಳಿಯ ಗೋವಿಂದರಾಜು ಮತ್ತು ನಾಗಪ್ಪ ಮಾರಡಗಿ ಅವರೂ ಕೂಡ ಅಪಹರಣಕ್ಕೊಳಗಾದರು.

ಅಪಹರಣದ ನಂತರದ ದಿನಗಳಲ್ಲಿ, ಕ್ಯಾಸೆಟ್ಟುಗಳ ಮೂಲಕ, ಪತ್ರಗಳ ಮೂಲಕ ಕರ್ನಾಟಕ ಹಾಗು ತಮಿಳುನಾಡು ಸರ್ಕಾರಗಳನ್ನು ಸಂಪರ್ಕಿಸುತ್ತಿದ್ದ ವೀರಪ್ಪನ್ ಡಾ. ರಾಜ್ ಅವರನ್ನು ಒತ್ತೆಯಾಳಗಿಟ್ಟುಕೊಂಡು, ಹಲವಾರು ಬೇಡಿಕೆಗಳನ್ನು ಮುಂದಿಟ್ಟಿದ್ದನು. ನೂರೆಂಟು ದಿನಗಳ ಕಾಲ ಅಪಹೃತರಾಗಿ, ೧೦೮ ದಿನ ಅರಣ್ಯವಾಸ ಅನುಭವಿಸಿದ್ದ ಡಾ. ರಾಜ್, ೧೫ ನವೆಂಬರ್ ೨೦೦೦ರಂದು ಬಿಡುಗಡೆಗೊಂಡರು.

ಅಪಹರಣದ ಅವಧಿಯಲ್ಲಿ ಕರ್ನಾಟಕದ ಪೋಲಿಸ್ ಮಹಾನಿರ್ದೇಶಕರಾದ(ಡಿಜಿಪಿ) ಪಿ. ದಿನಕರ್ ಅವರು ಅಪಹರಣದ ಬಗ್ಗೆ "Veerappan's Prize Catch: Dr.Rajkumar" ಎಂಬ ಪುಸ್ತಕವನ್ನು ಬರೆದಿದ್ದಾರೆ. ಆ ಪುಸ್ತಕವನ್ನು ರವಿ ಬೆಳಗೆರೆ ಯವರು "ರಾಜ ರಹಸ್ಯ" ಎಂಬ ಹೆಸರಿನಲ್ಲಿ ಕನ್ನಡಕ್ಕೆ ಅನುವಾದಿಸಿದ್ದಾರೆ.

 ನಿಧನ : 2006 ಏಪ್ರಿಲ್ 12 ರಂದು ಹೃದಯಾಘಾತದಿಂದ ಬೆಂಗಳೂರಿನಲ್ಲಿ ಮರಣ ಹೊಂದಿದರು.

 

ರಂಗಭೂಮಿ ಮತ್ತು ತಂದೆಯ ಪ್ರಭಾವ

ಬೇಡರ ಕಣ್ಣಪ್ಪ ಚಿತ್ರದಲ್ಲಿ ನಾಯಕನಾಗಿ ನಟಿಸುವ ಮುನ್ನ ಡಾ. ರಾಜ್ ಅವರ ಹೆಸರು ಮುತ್ತುರಾಜ ಎಂದಿತ್ತು. ಮುತ್ತುರಾಜನ ತಂದೆ ಸಿಂಗಾನಲ್ಲೂರು ಪುಟ್ಟಸ್ವಾಮಯ್ಯ ರವರು ಎಂದರೆ ೧೯೩೦-೧೯೫೦ ಕಾಲದಲ್ಲಿ ಕನ್ನಡ ರಂಗಭೂಮಿಯ ದೊಡ್ಡ ಹೆಸರು. ರೌದ್ರ ಪಾತ್ರಗಳಿಗೆ ಹೆಸರಾಗಿದ್ದ ಪುಟ್ಟಸ್ವಾಮಯ್ಯರವರು ಗುಬ್ಬಿ ಕಂಪನಿಯಲ್ಲಿ ಕಲಾವಿದರಾಗಿದ್ದರು. ಬಡತನದಿಂದಾಗಿ ಮುತ್ತುರಾಜ್ ವಿದ್ಯಾಭ್ಯಾಸ ನಾಲ್ಕನೆ ತರಗತಿಗೆ ನಿಂತಿತು.

ಗುಬ್ಬಿ ಕಂಪನಿಯೇ ವಿಶ್ವವಿದ್ಯಾನಿಲಯವಾಯಿತು. ತಂದೆಯನ್ನು ನೆರಳಿನಂತೆ ಹಿಂಬಾಲಿಸಿದ ಮುತ್ತು ರಾಜ್‌ಗೆ ಅವರಿಂದಲೇ ತರಬೇತಿಯಾಯಿತು. ನಾಟಕಗಳಲ್ಲಿ ಸಣ್ಣ ಪುಟ್ಟ ಪಾತ್ರ ನಿರ್ವಹಿಸುತ್ತಿದ್ದರು. ಡಾ. ರಾಜ್‌ಕುಮಾರ್ ಜೀವನದಲ್ಲಿ ತಂದೆ ಬೀರಿರುವ ಪ್ರಭಾವ ಅಪಾರ. ಫಾಲ್ಕೆ ಪ್ರಶಸ್ತಿ ಪ್ರಕಟವಾದಾಗ ಅವರು ಮೊದಲು ನೆನಪಿಸಿಕೊಂಡದ್ದು ತಂದೆ ಹೇಳಿದ ಮಾತುಗಳನ್ನೇ:"ಇಂತಹ ಸಾಧನೆ ನಿನ್ನಿಂದ ಸಾಧ್ಯ" ಎಂದು ಪುಟ್ಟಸ್ವಾಮಯ್ಯ ಮಗನ ಭವಿಷ್ಯವನ್ನು ಅಂದೇ ನುಡಿದಿದ್ದರು. ಅದು ನಿಜವಾಯಿತು.

"ನನ್ನ ತಂದೆ ರಂಗದ ಮೇಲೆ ಹುರಿ ಮೀಸೆ ತಿರುಗಿಸುತ್ತಾ, ಆರ್ಭಟಿಸುತ್ತಾ ರಂಗ ಪ್ರವೇಶಿಸಿದರೆಂದರೆ ಎಂತಹವರಿಗೂ ಒಂದು ಬಾರಿ ನಡುಕ ಬರುತ್ತಿತ್ತು" ಎಂದು ತಂದೆಯವರ ಅಭಿನಯವನ್ನು ಬಣ್ಣಿಸುವ ರಾಜ್‌ಕುಮಾರ್ ಅವರಿಗೆ ತಂದೆಯ ಅಭಿನಯ ಬಲುಪ್ರಿಯ. "ನಾನೂ ಅದೇ ರೀತಿ ಮಾಡಬೇಕೆಂದು ಭಕ್ತ ಪ್ರಹ್ಲಾದ ಚಿತ್ರದಲ್ಲಿ ಹಿರಣ್ಯ ಕಶಿಪು ಪಾತ್ರದಲ್ಲಿ ಅವರಂತೆ ಅಭಿನಯಿಸಲು ಸಾಧ್ಯವೇ ಎಂದು ಪ್ರಯತ್ನಿಸಿದೆ; ಆದರೆ ಬರಲಿಲ್ಲ" ಎಂದು ಹೇಳಿದ್ದಾರೆ.

ಗುಬ್ಬಿ ಕಂಪನಿಯಲ್ಲಿ ಪುಟ್ಟಸ್ವಾಮಯ್ಯನವರು ಅಭಿನಯಿಸುತ್ತಿದ್ದಾಗ ಮುತ್ತುರಾಜುವಿಗೆ "ಕೃಷ್ಣಲೀಲಾ" ಎಂಬ ನಾಟಕದಲ್ಲಿ ಸಣ್ಣ ಪಾತ್ರ ದೊರಕಿತು. ಕೆಲ ದಿನಗಳ ನಂತರ ಪುಟ್ಟಸ್ವಾಮಯ್ಯನವರು ಗುಬ್ಬಿ ಕಂಪನಿ ತೊರೆದು ಎಂ.ವಿ.ಸುಬ್ಬಯ್ಯ ನಾಯ್ಡು ಅವರ ಶ್ರೀ ಸಾಹಿತ್ಯ ಸಾಮ್ರಾಜ್ಯ ನಾಟಕ ಮಂಡಳಿಗೆ ಸೇರಿದಾಗ ಅಕಸ್ಮಾತ್ತಾಗಿ ಮುತ್ತುರಾಜ್‌ಗೆ "ಅಂಬರೀಷ" ನಾಟಕದಲ್ಲಿ ಅಂಬರೀಷನ ತಮ್ಮ ರಮಾಕಾಂತನ ಪಾತ್ರ ದೊರಕಿತು.

ಅನಂತರ "ಕುರುಕ್ಷೇತ್ರ" ನಾಟಕದಲ್ಲಿ ತಂದೆ ಭೀಮನ ಪಾತ್ರವಾದರೆ ಮಗ ಅರ್ಜುನನ ಪಾತ್ರ. ರಾಜ್‌ಕುಮಾರ್‌ಗೆ ಇದು ರಂಗ ತಾಲೀಮು. ೧೯೫೧ರಲ್ಲಿ ತಂದೆ ಪುಟ್ಟಸ್ವಾಮಯ್ಯನವರ ನಿಧನ. ಬಂದೆರಗಿದ ಅಘಾತದಿಂದ ತತ್ತರಿಸಿದ ಮುತ್ತುರಾಜ್, ಮತ್ತೆ ಗುಬ್ಬಿ ಕಂಪನಿ ಸೇರಿ "ಭೂ ಕೈಲಾಸ" ನಾಟಕದಲ್ಲಿ ಅಭಿನಯಿಸಿದರು. ಗುಬ್ಬಿ ಕಂಪನಿ ಅಲ್ಲದೆ, ಶ್ರೀ ಸಾಹಿತ್ಯ ಮಂಡಲಿ, ಶೇಷಾಚಾರ್ಯರ ಶೇಷಕಮಲ ನಾಟಕ ಮಂಡಳಿಯಲ್ಲಿಯೂ ರಾಜ್‌ಕುಮಾರ್ ಒಂದು ವರ್ಷ ಸೇವೆ ಸಲ್ಲಿಸಿದ್ದಾರೆ.

 ಚಿತ್ರರಂಗಕ್ಕೆ ನಾಯಕನಾಗಿ ಪಾದಾರ್ಪಣೆ

೧೯೪೨ರಲ್ಲಿ ಬಿಡುಗಡೆಯಾದ ಭಕ್ತ ಪ್ರಹ್ಲಾದ ಚಿತ್ರದಲ್ಲಿ ನಟನಾಗಿಯೂ, ೧೯೫೨ರಲ್ಲಿ ಬಿಡುಗಡೆಯಾದ ಶಂಕರ್‌ಸಿಂಗ್ ನಿರ್ದೇಶನದ ಶ್ರೀ ಶ್ರೀನಿವಾಸ ಕಲ್ಯಾಣ ಚಿತ್ರದಲ್ಲಿ ಸಪ್ತರ್ಷಿಗಳಲ್ಲಿ ಒಬ್ಬರಾಗಿ ಅಭಿನಯಿಸಿದ್ದ ಮುತ್ತುರಾಜ್, ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು.

೧೯೫೩ರಲ್ಲಿ ಆಗಷ್ಟೆ ಮದುವೆಯಾಗಿದ್ದ ಮುತ್ತುರಾಜ್ ದಂಪತಿಗಳು ನಂಜನಗೂಡಿನಿಂದ ಮೈಸೂರಿಗೆ ಹೊರಡಲು ರೈಲ್ವೆ ನಿಲ್ದಾಣದಲ್ಲಿದ್ದರು. ಅದೇ ಸಮಯಕ್ಕೆ ಹೆಚ್.ಎಲ್.ಎನ್.ಸಿಂಹ ಕೂಡ ಮೈಸೂರಿಗೆ ಹೋಗಲು ಅಲ್ಲಿಗೆ ಬಂದಿದ್ದರು. ಅವರು ಮುತ್ತು ರಾಜ್‌ರವರನ್ನು ಚಿಕ್ಕಂದಿನಿಂದ ನೋಡಿದ್ದರು. ಅಂದು ರೈಲ್ವೆ ನಿಲ್ದಾಣದಲ್ಲಿ ಆ ದಂಪತಿಗಳನ್ನು ಕಂಡು ಪ್ರೀತಿಯಿಂದ ಮಾತನಾಡಿಸಿ, ಯೋಗಕ್ಷೇಮ ವಿಚಾರಿಸಿದರು.

ಸಿಂಹ ಕಣ್ಣಪ್ಪನ ಪಾತ್ರಕ್ಕೆ ಹೊಸನಟನನ್ನು ಹುಡುಕುತ್ತಿದ್ದ ಸಮಯ. ಅಂದು ಕಟ್ಟುಮಸ್ತಾದ ಆಳು ಮುತ್ತರಾಜ್‌ರವರನ್ನು ಕಂಡ ತಕ್ಷಣ "ಇವನನ್ನೇ ಕಣ್ಣಪ್ಪನಾಗಿ ಏಕೆ ಮಾಡಬಾರದು" ಎಂಬ ಭಾವನೆ ಮೂಡಿತ್ತು. ಮುತ್ತುರಾಜ್ ಬಳಿ ವಿಳಾಸವನ್ನು ಪಡೆದು, ದಂಪತಿಗಳಿಗೆ ಶುಭ ಕೋರಿ ಸಿಂಹ ಬೀಳ್ಕೊಟ್ಟಿದ್ದರು. ಮೇಲಿನ ಘಟನೆ ನಡೆದ ಕೆಲ ದಿನಗಳಲ್ಲಿ ಮೈಸೂರಿನ ಟೌನ್‌ಹಾಲಿನಲ್ಲಿ ಬೇಡರ ಕಣ್ಣಪ್ಪ ನಾಟಕ ಪ್ರದರ್ಶನವಿತ್ತು. ಅದರಲ್ಲಿ ಮುತ್ತುರಾಜ್ ಕಣ್ಣಪ್ಪನ ಪಾತ್ರ ವಹಿಸುತ್ತಾರೆ ಎಂದು ಸಿಂಹರವರಿಗೆ ತಿಳಿಯಿತು. * ಆ ದಿನ, ಅರ್ಧಗಂಟೆ ನಾಟಕ ನೋಡಿ, ಮುತ್ತುರಾಜ್‌ರವರ ತನ್ಮಯತೆಯ ಅಭಿನಯ ಕಂಡು ಸಿಂಹ ಸಂತೋಷ ಪಟ್ಟರು. ಗುಬ್ಬಿ ಕರ್ನಾಟಕ ಫಿಲಂಸ್ ನಿರ್ಮಿಸುತ್ತಿದ್ದ ಬೇಡರ ಕಣ್ಣಪ್ಪ ಚಿತ್ರದಲ್ಲಿನ ಕಣ್ಣಪ್ಪನ ಪಾತ್ರಕ್ಕೆ ಈತನೇ ಸರಿಯಾದ ವ್ಯಕ್ತಿ ಎಂದುಕೊಂಡು ನಿರ್ಮಾಪಕ ಎ.ವಿ.ಎಂ.ಚೆಟ್ಟಿಯಾರ್ ಅವರನ್ನು ಸಂಪರ್ಕಿಸಿ, ಆ ಚಿತ್ರದ ಸಹ ನಿರ್ಮಾಪಕರಾಗಿದ್ದ ಗುಬ್ಬಿ ವೀರಣ್ಣನವರಿಗೆ ಈ ವಿಷಯ ತಿಳಿಸಿ ಅವರನ್ನು ಒಪ್ಪಿಸಿದರು.

ನಂತರ ಮುತ್ತುರಾಜ್ ಜಿ.ವಿ.ಅಯ್ಯರ್ ಹಾಗು ನರಸಿಂಹರಾಜು ಇವರುಗಳನ್ನು 'ಸ್ಕ್ರೀನ್ ಟೆಸ್ಟ್' ಗೆ ಮದರಾಸಿಗೆ ಬರಲು ಆಹ್ವಾನಿಸಿದರು. ನಿರ್ದೇಶಕ ಎಚ್.ಎಲ್.ಎನ್.ಸಿಂಹ ಅವರಿಂದ ಮುತ್ತುರಾಜ್‌ಗೆ “ರಾಜ‌ಕುಮಾರ್” ಎಂಬ ಹೊಸ ಹೆಸರಿನ ನಾಮಕರಣವಾಯಿತು. ರಾಜಕುಮಾರ್ ಬೇಡರ ಕಣ್ಣಪ್ಪ ಚಿತ್ರದ ನಾಯಕನಾಗಿ ಅಭಿನಯಿಸಿದರು.

ಚಿತ್ರವು ೧೯೫೪ರ ಮೇ ತಿಂಗಳಲ್ಲಿ ಆಗಿನ ಮೈಸೂರು ರಾಜ್ಯದಲ್ಲಿ ಎಲ್ಲೆಡೆ ಬಿಡುಗಡೆಗೊಂಡಿತು. ಬೇಡರ ಕಣ್ಣಪ್ಪ ಚಿತ್ರ ರಾಷ್ಟ್ರಪ್ರಶಸ್ತಿ ಪಡೆದ ಪ್ರಥಮ ಚಿತ್ರವಾಗಿ ಕನ್ನಡ ಚಿತ್ರರಂಗದಲ್ಲಿಯೇ ಒಂದು ಮೈಲಿಗಲ್ಲಾಯಿತು. ಮದರಾಸು 'ಸ್ಕ್ರೀನ್ ಟೆಸ್ಟ್' ನೋಡಿದ ನಿರ್ಮಾಪಕ ಎ.ವಿ.ಎಂ.ಚೆಟ್ಟಿಯಾರ್ ಅವರು ಹೆಚ್.ಎಲ್.ಎನ್.ಸಿಂಹ ಅವರ ಬಳಿ ಹೋಗಿ " ಈ ಉದ್ದ ಮೂಗಿನ ಮತ್ತು ಹಲ್ಲು ಹುಬ್ಬು ಇರುವವರನ್ನು ಹಾಕಿಕೊಂಡು ಏನು ಚಿತ್ರ ಮಾಡುತ್ತೀಯ ಎಂದು ಕೇಳಿದ್ದರಂತೆ. ಆದರೆ ಹೆಚ್.ಎಲ್.ಎನ್.ಸಿಂಹ ಅವರು ನಿರ್ಮಾಪಕರಿಗೆ ಎ.ವಿ.ಎಂ.ಚೆಟ್ಟಿಯಾರ್, ಇವರೇ ಸರಿಯಾದ ವ್ಯಕ್ತಿಗಳು ಎಂದು ಹೇಳಿ ಒಪ್ಪಿಸಿದ್ದರು.

ಬಣ್ಣದ ಬದುಕಿನ ಪಕ್ಷಿನೋಟ

ಬೇಡರ ಕಣ್ಣಪ್ಪ ಚಿತ್ರದಿಂದ ನಾಯಕ ನಟನಾಗಿ ಅಭಿನಯಿಸಲು ಪ್ರಾರಂಭಿಸಿದ ರಾಜಕುಮಾರ್, ಭಕ್ತ ವಿಜಯ, ಹರಿಭಕ್ತ, ಓಹಿಲೇಶ್ವರ, ಭೂಕೈಲಾಸ, ಭಕ್ತ ಕನಕದಾಸ, ನವಕೋಟಿ ನಾರಾಯಣ(ಭಕ್ತ ಪುರಂದರದಾಸ) ಮುಂತಾದ ಭಕ್ತಿ ಪ್ರಧಾನ ಚಿತ್ರಗಳಲ್ಲಿ ಅಭಿನಯಿಸಿದರು. ೨೦೦ ಚಿತ್ರಗಳಲ್ಲಿ ನಾಯಕನಾಗಿ ಅಭಿನಯಿಸಿದ ಕನ್ನಡದ ಏಕೈಕ ಕಲಾವಿದರು.

೧೯೬೦ರ ದಶಕದಲ್ಲಿ, ಕಣ್ತೆರೆದು ನೋಡು, ಗಾಳಿಗೋಪುರ, ನಂದಾದೀಪ, ಸಾಕು ಮಗಳು, ನಾಂದಿ ಮುಂತಾದ ಸಾಮಾಜಿಕ ಚಿತ್ರಗಳಲ್ಲಿಯೂ, ರಣಧೀರ ಕಂಠೀರವ, ಕಿತ್ತೂರು ಚೆನ್ನಮ್ಮ, ಇಮ್ಮಡಿ ಪುಲಿಕೇಶಿ, ಶ್ರೀ ಕೃಷ್ಣದೇವ ರಾಯ ಮುಂತಾದ ಐತಿಹಾಸಿಕ ಚಿತ್ರಗಳು ರಾಜ್ ಅಭಿನಯದಲ್ಲಿ ತೆರೆ ಕಂಡವು.

೧೯೬೬ರಲ್ಲಿ ಬಿಡುಗಡೆಯಾದ ಸಂಗೀತ ಪ್ರಧಾನ ಸಂಧ್ಯಾರಾಗ ಚಿತ್ರದಲ್ಲಿ ಶಾಸ್ತ್ರೀಯ ಸಂಗೀತಗಾರನಾಗಿ ನಟಿಸಿದ ರಾಜ್ ಅವರ ಅಭಿನಯಕ್ಕೆ ಭಾರತದ ಹೆಸರಾಂತ ಶಾಸ್ತ್ರೀಯ ಗಾಯಕರಾದ ಡಾ.ಬಾಲಮುರಳಿ ಕೃಷ್ಣ ಹಾಗು ಪಂಡಿತ್ ಭೀಮಸೇನ ಜೋಷಿ ಅವರು ಹಾಡಿದ್ದಾರೆ.

ಇದೇ ವರ್ಷ ತೆರೆಕಂಡ ಮಂತ್ರಾಲಯ ಮಹಾತ್ಮೆ ಚಿತ್ರದಲ್ಲಿ ರಾಜ್‌ಕುಮಾರ್ ಶ್ರೀ ರಾಘವೇಂದ್ರ ಸ್ವಾಮಿಗಳ ಪಾತ್ರದಲ್ಲಿ ನಟಿಸಿದ್ದು, ಈ ಚಿತ್ರದಲ್ಲಿನ ಅಭಿನಯ ತಮ್ಮ ಚಿತ್ರ ಬದುಕಿನಲ್ಲಿ ಮಿಕ್ಕೆಲ್ಲ ಚಿತ್ರಗಳಿಗಿಂತಲೂ ಹೆಚ್ಚು ತೃಪ್ತಿಕರ ಎಂದು ಹಲವಾರು ಬಾರಿ ಸಂದರ್ಶನಗಳಲ್ಲಿ ತಿಳಿಸಿದ್ದಾರೆ.

೧೯೬೮ರಲ್ಲಿ ಬಿಡುಗಡೆಯಾದ ಜೇಡರ ಬಲೆ ಎಂಬ ಚಿತ್ರದ ಮೂಲಕ ಜೇಮ್ಸ್ ಬಾಂಡ್ ಮಾದರಿಯ ಗೂಢಚಾರಿ ಪಾತ್ರವನ್ನಾಧರಿಸಿದ ಚಿತ್ರಸರಣಿಗೆ ನಾಂದಿ ಹಾಡಿದರು. ಈ ಸರಣಿ ಯಲ್ಲಿ 'ಪ್ರಕಾಶ್' ಎಂಬ ಏಜೆಂಟ್ ಹೆಸರಿನಲ್ಲಿ (ಏಜೆಂಟ್ ೯೯೯) ಅಭಿನಯಿಸಿದರು. ಈ ಸರಣಿಯಲ್ಲಿನ ಇತರ ಚಿತ್ರಗಳು ಆಪರೇಷನ್ ಜಾಕ್‌ಪಾಟ್‌ನಲ್ಲಿ ಸಿ.ಐ.ಡಿ. ೯೯೯, ಗೋವಾದಲ್ಲಿ ಸಿ.ಐ.ಡಿ. ೯೯೯ ಹಾಗು ಆಪರೇಷನ್ ಡೈಮಂಡ್ ರಾಕೆಟ್. ಇವಲ್ಲದೇ ಸಿ.ಐ.ಡಿ. ರಾಜಣ್ಣ ಚಿತ್ರದಲ್ಲಿ ಸಿ.ಐ.ಡಿ ಆಗಿ ರಾಜ್ ಅಭಿನಯಿಸಿದ್ದಾರೆ.

ರಾಜ್‌ಕುಮಾರ್ ಅವರ ನೂರನೇ ಚಿತ್ರವಾದ ಭಾಗ್ಯದ ಬಾಗಿಲು ೧೯೬೮ರಲ್ಲಿ ತೆರೆ ಕಂಡಿತು. ಇದೇ ಸಂದರ್ಭದಲ್ಲಿ ಇವರಿಗೆ ನಟಸಾರ್ವಭೌಮ ಎಂಬ ಬಿರುದನ್ನು ನೀಡಿ ಗೌರವಿಸಲಾಯಿತಲ್ಲದೆ, ಅದೇ ಹೆಸರಿನ ಚಲನಚಿತ್ರವೂ (ನಟಸಾರ್ವಭೌಮ) ಕೂಡ ತಯಾರಾಯಿತು. ಈ ಚಿತ್ರವು ರಾಜ್‌ಕುಮಾರ್ ಅವರ ಹಿಂದಿನ ನೂರು ಚಿತ್ರಗಳ ತುಣುಕು ದೃಶ್ಯಗಳನ್ನು ಜೊತೆಗೂಡಿಸಿ ತಯಾರಿಸುವ ಯೋಜನೆಯೊಂದಿಗೆ ಪ್ರಾರಂಭವಾದರೂ, ಸ್ಥಳಾವಕಾಶದ ಕೊರತೆಯಿಂದ ಕೆಲವು ಚಿತ್ರಗಳ ತುಣುಕುಗಳನ್ನು ಕೈಬಿಡಲಾಗಿದೆ.

೧೯೭೧ರಲ್ಲಿ ಬಿಡುಗಡೆಯಾದ ಕಸ್ತೂರಿ ನಿವಾಸ ಮತ್ತು ಸಾಕ್ಷಾತ್ಕಾರ ಚಿತ್ರಗಳು ರಾಜ್ ಅವರ ಜನಪ್ರಿಯ ಚಿತ್ರಗಳಲ್ಲಿ ಮುಖ್ಯವಾದವು. ಈ ಚಿತ್ರಗಳಲ್ಲಿನ ಆಡಿಸಿನೋಡು ಬೀಳಿಸಿ ನೋಡು ಉರುಳಿ ಹೋಗದು ಹಾಗು ಒಲವೆ ಜೀವನ ಸಾಕ್ಷಾತ್ಕಾರ ಹಾಡುಗಳು ಜನಮನಗಳಲ್ಲಿ ವಿಶೇಷ ಸ್ಥಾನ ಪಡೆದ ಗೀತೆಗಳಾಗಿವೆ.

ರಾಜ್‌ಕುಮಾರ್ ಅವರನ್ನು ಖ್ಯಾತಿಯ ಉತ್ತುಂಗಕ್ಕೇರಿಸಿದ ಚಿತ್ರ ೧೯೭೧ರಲ್ಲಿ ತೆರೆಕಂಡ ಬಂಗಾರದ ಮನುಷ್ಯ. ಚಿತ್ರಮಂದಿರದಲ್ಲಿ ಸತತವಾಗಿ ಎರಡು ವರ್ಷಕ್ಕೂ ಹೆಚ್ಚಿನ ಅವಧಿಯ ಪ್ರದರ್ಶನಗೊಂಡು ಹೊಸ ದಾಖಲೆಯನ್ನು ನಿರ್ಮಿಸಿತು. ಈ ದಾಖಲೆ ಕನ್ನಡ ಚಿತ್ರರಂಗದಲ್ಲಿ ಇಂದಿಗೂ ಅಚ್ಚಳಿಯದೇ ನಿಂತಿದೆ. ಈ ಚಿತ್ರದಲ್ಲಿನ ರಾಜ್ ಅಭಿನಯದ ರಾಜೀವಪ್ಪ ಎಂಬ ಪಾತ್ರವು ಕನ್ನಡ ಚಿತ್ರರಂಗದಲ್ಲಿನ ಅತ್ಯಂತ ಖ್ಯಾತ ಪಾತ್ರಗಳಲ್ಲಿ ಒಂದಾಗಿ ಹೆಸರು ಪಡೆಯಿತು.

ರಾಜ್‌ಕುಮಾರ್ ಅವರ ನೂರೈವತ್ತನೇ ಚಿತ್ರ, ೧೯೭೩ರಲ್ಲಿ ತೆರೆಕಂಡ, ಗಂಧದ ಗುಡಿ. ರಾಜ್ ಅರಣ್ಯಾಧಿಕಾರಿಯ ಪಾತ್ರದಲ್ಲಿ ನಟಿಸಿದ ಈ ಚಿತ್ರದಲ್ಲಿ ಕನ್ನಡ ಚಿತ್ರರಂಗದ ಮತ್ತೊಬ್ಬ ಖ್ಯಾತ ನಟರಾದ ವಿಷ್ಣುವರ್ಧನ್ ಅಭಿನಯಿಸಿದ್ದಾರೆ. ೧೯೭೪ರಲ್ಲಿ ತೆರೆಕಂಡ ಭಕ್ತ ಕುಂಬಾರ ಚಿತ್ರದಲ್ಲಿನ ರಾಜ್ ಅಭಿನಯ ಮನೋಜ್ಞ ಮತ್ತು ಅತ್ಯಂತ ಭಾವಪೂರ್ಣ ಎಂದು ವಿಮರ್ಶಕರ ಅಭಿಪ್ರಾಯ.

ಇದೇ ವರ್ಷ ಬಿಡುಗಡೆ ಯಾದ ಸಂಪತ್ತಿಗೆ ಸವಾಲ್ ಚಿತ್ರದ ಯಾರೇ ಕೂಗಾಡಲಿ, ಊರೇ ಹೋರಾಡಲಿ ಹಾಡಿನ ಮೂಲಕ ರಾಜ್ ಹಿನ್ನೆಲೆ ಗಾಯಕರಾಗಿ ತಮ್ಮ ಮುಂದಿನ ಎಲ್ಲಾ ಚಿತ್ರಗಳಲ್ಲೂ ಹಾಡಲು ಪ್ರಾರಂಭಿಸಿದರು.

೧೯೭೫ರಲ್ಲಿ ಬಿಡುಗಡೆಯಾದ ಮಯೂರ ಚಲನಚಿತ್ರವು ಕನ್ನಡದ ಪ್ರಥಮ ದೊರೆ ಕದಂಬರ ಮಯೂರವರ್ಮರನ್ನಾಧರಿಸಿದೆ. ಈ ಚಿತ್ರದಲ್ಲಿರುವ ನಾನಿರುವುದೆ ನಿಮಗಾಗಿ, ನಾಡಿರುವುದೆ ನಮಗಾಗಿ ಗೀತೆಯು ರಾಜ್ ಗಾಯನದಲ್ಲಿನ ಅತ್ಯಂತ ಜನಪ್ರಿಯ ಗೀತೆಗಳಲ್ಲೊಂದು.

೧೯೭೬ರಲ್ಲಿ ಮೈಸೂರು ವಿಶ್ವವಿದ್ಯಾಲವು ರಾಜ್‌ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿತು.

೧೯೭೭ರಲ್ಲಿ ಬಂದಂತಹ ಸನಾದಿ ಅಪ್ಪಣ್ಣ ಚಿತ್ರದಲ್ಲಿ, ಡಾ. ರಾಜ್ ಶಹನಾಯಿ ವಾದಕರಾಗಿ ಅಭಿನಯಿಸಿದರು. ಈ ಚಿತ್ರಕ್ಕೆ ಅವಶ್ಯಕವಾಗಿದ್ದ ಶಹನಾಯಿ ವಾದನವನ್ನು ನುಡಿಸಿದವರು ಭಾರತದ ಪ್ರಖ್ಯಾತ ಶಹನಾಯಿ ವಾದಕರಾದ ಉಸ್ತಾದ್ ಬಿಸ್ಮಿಲ್ಲಾ ಖಾನ್. ಜಿ.ಕೆ.ವೆಂಕಟೇಶ್ ಸಂಗೀತದಲ್ಲಿ ಎಸ್.ಜಾನಕಿಯವರು ಹಾಡಿರುವ ಕರೆದರೂ ಕೇಳದೆ ಎಂಬ ಹಾಡಿನಲ್ಲಿ ಬರುವ ಬಿಸ್ಮಿಲ್ಲಾ ಖಾನರ ಶಹನಾಯಿ ವಾದನಕ್ಕೆ ಡಾ. ರಾಜ್ ಅಭಿನಯಿಸಿದ್ದಾರೆ.

೧೯೮೦ರ ದಶಕದಲ್ಲಿ ಸದಭಿರುಚಿಯ ಸಾಮಾಜಿಕ ಚಿತ್ರಗಳಾದ ಹಾಲುಜೇನು, ಚಲಿಸುವ ಮೋಡಗಳು, ಹೊಸ ಬೆಳಕು, ಶ್ರಾವಣ ಬಂತು, ಅನುರಾಗ ಅರಳಿತು, ಶ್ರುತಿ ಸೇರಿದಾಗ ಮುಂತಾದ ಯಶಸ್ವಿ ಚಿತ್ರಗಳು ತೆರೆ ಕಂಡವು. ಇದೇ ಅವಧಿಯಲ್ಲಿ ಡಾ. ರಾಜ್ ಅವರು ಅನಂತ್ ನಾಗ್ ಅವರೊಂದಿಗೆ ಕಾಮನಬಿಲ್ಲು ಚಿತ್ರದಲ್ಲಿಯೂ, ಶಂಕರ್ ನಾಗ್ ಅವರೊಂದಿಗೆ ಅಪೂರ್ವ ಸಂಗಮ ಚಿತ್ರದಲ್ಲಿಯೂ ಅಭಿನಯಿಸಿದರು.

ಶಂಕರ್ ನಾಗ್ ನಿರ್ದೇಶನದ ಕೆಲವೇ ಚಿತ್ರಗಳಲ್ಲಿ ಒಂದಾದ ಒಂದು ಮುತ್ತಿನ ಕಥೆ ಚಿತ್ರದಲ್ಲಿ ಡಾ. ರಾಜ್ ನಟಿಸಿದ್ದಾರೆ. ತಮ್ಮ ಯೋಗಾಸನಗಳಿಗೆ ಹೆಸರಾಗಿದ್ದ ಡಾ. ರಾಜ್ ಅವರ ವಿವಿಧ ಯೋಗಾಸನಗಳ ಭಂಗಿಗಳು ಕಾಮನಬಿಲ್ಲು ಚಿತ್ರದ ಮೂಲಕ ಬೆಳ್ಳಿತೆರೆಯ ಮೇಲೂ ಮೂಡಿಬಂದಿದೆ.

೧೯೮೩ರಲ್ಲಿ ಬಂದಂತಹ ಕವಿರತ್ನ ಕಾಳಿದಾಸ, ಡಾ. ರಾಜ್ ಅವರ ಕಲಾ ನೈಪುಣ್ಯಕ್ಕೆ ಓರೆ ಹಚ್ಚಿದ ಚಿತ್ರ. ಈ ಚಿತ್ರದಲ್ಲಿ ಅವಿದ್ಯಾವಂತ ಕುರುಬನಾಗಿಯೂ, ಮಹಾಕವಿಯಾದ ಕಾಳಿದಾಸನಾಗಿಯೂ, ದುಷ್ಯಂತ ಮಹಾರಾಜನಾಗಿಯೂ ವಿವಿಧ ಪಾತ್ರಗಳಿಗೆ ರಾಜ್ ಜೀವ ತುಂಬಿದ್ದಾರೆ. ಈ ಚಿತ್ರವು ಕನ್ನಡ ಚಿತ್ರರಂಗದ ಅತ್ಯಂತ ಯಶಸ್ವಿ ಚಿತ್ರಗಳಲ್ಲೊಂದಾಗಿಸುವಲ್ಲಿ ಡಾ. ರಾಜ್ ಅಮೋಘ ಅಭಿನಯದ ಕೊಡುಗೆ ಮುಖ್ಯವಾದುದೆಂದು ವಿಮರ್ಶಕರ ಅಭಿಪ್ರಾಯ.

ಡಾ. ರಾಜ್ ಅವರ ಇನ್ನೂರನೇ ಚಿತ್ರವು ೧೯೮೮ರಲ್ಲಿ ತೆರೆಕಂಡ ದೇವತಾ ಮನುಷ್ಯ. ಈ ಚಿತ್ರದಲ್ಲಿ ಕನ್ನಡ ಚಿತ್ರರಂಗದ ಹೆಸರಾಂತ ನಟಿಯರೊಲ್ಲೊಬ್ಬರಾದ ಸುಧಾರಾಣಿ ಯವರು ಡಾ. ರಾಜ್ ಅವರ ಪುತ್ರಿಯಾಗಿ ನಟಿಸಿದ್ದಾರೆ. ಕನ್ನಡದ ಮತ್ತೊಬ್ಬ ಜನಪ್ರಿಯ ನಾಯಕ ನಟರಾದ ಅಂಬರೀಶ್ ಅವರ ಸಹೋದರನಾಗಿ ಒಡಹುಟ್ಟಿದವರು ಚಿತ್ರದಲ್ಲಿ ಅಭಿನಯಿಸಿದ ಡಾ. ರಾಜ್, ಸಾಮಾಜಿಕ ಕಳಕಳಿಯ ಚಿತ್ರಗಳತ್ತ ಒಲವು ತೋರಿದ್ದರು.

ಜೀವನ ಚೈತ್ರ ಚಿತ್ರದ ಮೂಲಕ ಸಾರಾಯಿ ಪಿಡುಗಿನ ವಿರುದ್ಧ, ಆಕಸ್ಮಿಕ ಚಿತ್ರದ ಮೂಲಕ ಹೆಣ್ಣಿನ ಶೋಷಣೆಯ ವಿರುದ್ಧ, ಶಬ್ದವೇಧಿ ಚಿತ್ರದ ಮೂಲಕ ಮಾದಕ ವ್ಯಸನಗಳ ವಿರುದ್ಧ ಹೋರಾಡುವ ಪಾತ್ರದಲ್ಲಿ ಡಾ. ರಾಜ್ ಅಭಿನಯಿಸಿದರು. ಡಾ. ರಾಜ್‌ಕುಮಾರ್ ನಾಯಕನಾಗಿ ನಟಿಸಿದ ಕೊನೆಯ ಚಿತ್ರ ವರ್ಷ ೨೦೦೦ರಲ್ಲಿ ತೆರೆಕಂಡ ಶಬ್ದವೇದಿ.

ಭಕ್ತ ಅಂಬರೀಶ ಎಂಬ ಚಿತ್ರದಲ್ಲಿ ನಟಿಸಬೇಕೆಂಬ ಹಂಬಲವನ್ನು ರಾಜ್ ಹಲವಾರು ಬಾರಿ ವ್ಯಕ್ತಪಡಿಸಿದ್ದರಾದರೂ ಅನಾರೋಗ್ಯದ ಕಾರಣ ಅದು ಸಾಧ್ಯವಾಗಲಿಲ್ಲ.

ಬೆಳ್ಳಿತೆರೆಯ ಮೇಲೆ ಡಾ. ರಾಜ್ ಅವರು ಕಡೆಯದಾಗಿ ಕಾಣಿಸಿಕೊಂಡ ಚಿತ್ರ ತಮ್ಮ ಪುತ್ರ ಶಿವರಾಜ್‌ಕುಮಾರ್ ನಾಯಕತ್ವದಲ್ಲಿನ ಜೋಗಿ. ಚಿತ್ರದ ಆರಂಭದ ದೃಶ್ಯದಲ್ಲಿ ನಾಯಕನ ಜೋಳಿಗೆಗೆ ಅಕ್ಕಿಯನ್ನು ಅರ್ಪಿಸಿ, ಆಶೀರ್ವದಿಸುತ್ತಾರೆ.

ಸುಮಾರು ೨೦೬ ಚಿತ್ರಗಳಲ್ಲಿ ನಾಯಕನಟರಾಗಿ ನಟಿಸಿರುವ ರಾಜ್ ಕುಮಾರ್ ಬೆರಳೆಣಿಕೆಯ ರಿಮೇಕ್ ಚಿತ್ರಗಳಲ್ಲಿ ನಟಿಸಿದ್ದಾರೆ. ಅವೆಂದರೆ "ಅಣ್ಣ ತಂಗಿ","ಮುರಿಯದ ಮನೆ" ,"ವಾತ್ಸಲ್ಯ", "ಮನಸಾಕ್ಷಿ", "ಬಾಳ ಬಂಧನ" ,"ನನ್ನ ತಮ್ಮ", "ಭಾಗ್ಯವಂತರು", "ಅಪೂರ್ವ ಸಂಗಮ" ಮುಂತಾದವುಗಳು. ಅಲ್ಲಿಯೂ ಅವರು ಮೂಲ ನಟರನ್ನು ಅನುಕರಿಸದೆ ತಮ್ಮದೇ ಶೈಲಿಯಲ್ಲಿ ಅಭಿನಯಿಸಿದ್ದಾರೆ. "ಬೇಡರ ಕಣ್ಣಪ್ಪ" ತೆಲುಗಿನಲ್ಲಿ ‘ಶ್ರೀ ಕಾಳಹಸ್ತಿ ಮಹಾತ್ಮಂ’ ಎಂಬ ಹೆಸರಲ್ಲಿ ತಯಾರಾಯಿತು. ಅದರಲ್ಲಿ ಕೂಡ ಡಾ. ರಾಜ್ ಕುಮಾರ್ ಹೀರೊ ಆಗಿ ನಟಿಸಿದರು. ಇದು ಬೇರೆ ಭಾಷೆಯಲ್ಲಿ ರಾಜ್ ಕುಮಾರ್ ನಟಿಸಿದ ಏಕೈಕ ಚಿತ್ರ.

ಡಾ. ರಾಜ್ ಕುಮಾರ್ ಅವರು ಅಂದಿನ ಬಹುತೇಕ ಎಲ್ಲ ಜನಪ್ರಿಯ ನಾಯಕಿಯರೊಂದಿಗೆ ನಟಿಸಿದ್ದಾರೆ. ಎಂ.ವಿ.ರಾಜಮ್ಮ, ಪಂಡರೀಬಾಯಿ, ಪ್ರತಿಮಾದೇವಿ, ಹರಿಣಿ, ಸಾಹುಕಾರ್ ಜಾನಕಿ , ಕೃಷ್ಣಕುಮಾರಿ, ರಾಜಸುಲೋಚನ, ಬಿ.ಸರೋಜದೇವಿ, ಸಂಧ್ಯಾ,ಆದವಾನಿ ಲಕ್ಷ್ಮಿ ದೇವಿ, ಮೈನಾವತಿ, ಲೀಲಾವತಿ, ಜಯಂತಿ, ಭಾರತಿ, ಕಲ್ಪನಾ, ವಂದನಾ, ಚಂದ್ರಕಲಾ, ಉದಯಚಂದ್ರಿಕಾ, ಬಿ.ವಿ.ರಾಧ, ಶೈಲಶ್ರೀ, ರಾಜಶ್ರೀ, ಆರತಿ, ಮಂಜುಳಾ, ಲಕ್ಷ್ಮಿ, ರೇಖಾ, ಜಯಮಾಲಾ, ಜಯಪ್ರದಾ, ಗಾಯತ್ರಿ, ಸರಿತಾ, ಜಯಚಿತ್ರಾ, ಕಾಂಚನಾ, ವಾಣಿಶ್ರೀ, ಜಿ.ವಿ.ಲತಾ, ಮಾಧವಿ, ಗೀತಾ, ಅಂಬಿಕಾ, ರೂಪಾದೇವಿ, ಊರ್ವಶಿ ಮುಂತಾದವರೊಂದಿಗೆ ನಟಿಸಿದ್ದಾರೆ. ರಾಜ್-ಭಾರತಿ, ರಾಜ್-ಲೀಲಾವತಿ, ರಾಜ್-ಜಯಂತಿ, ರಾಜ್-ಕಲ್ಪನಾ ಜೋಡಿ ಆ ಕಾಲದಲ್ಲಿ ಅತ್ಯಂತ ಜನಪ್ರಿಯ ಜೋಡಿಯಾಗಿತ್ತು.

ಗಾಯಕರಾಗಿ ಡಾ. ರಾಜ್

ಕೇವಲ ನಟನೆಯಲ್ಲದೆ, ಅತ್ಯುತ್ತಮ ಗಾಯಕರೂ ಆಗಿದ್ದ ರಾಜ್ ಕನ್ನಡ ಗಾನಲೋಕಕ್ಕೂ ತಮ್ಮ ಅಪಾರ ಸೇವೆ ಸಲ್ಲಿಸಿದ್ದಾರೆ. ೧೯೭೪ರಲ್ಲಿ ಬಿಡುಗಡೆಯಾದ ಸಂಪತ್ತಿಗೆ ಸವಾಲ್ ಚಿತ್ರದ ಯಾರೇ ಕೂಗಾಡಲಿ,ಊರೇ ಹೋರಾಡಲಿ (ಎಮ್ಮೆ ಹಾಡೆಂದೇ ಪ್ರಸಿದ್ಧಿ) ಎಂಬ ಹಾಡಿನಿಂದ ಅವರು ಪೂರ್ಣ ಪ್ರಮಾಣದ ಗಾಯಕರಾಗಿ ಹೊರ ಹೊಮ್ಮಿದರು.

ಇದಕ್ಕೂ ಮುಂಚೆ ೧೯೫೬ರಲ್ಲೇ ಓಹಿಲೇಶ್ವರ ಚಿತ್ರದಲ್ಲಿ "ಶರಣು ಶಂಭೋ" ಎಂಬು ಗೀತೆಯೊಂದನ್ನು ಹಾಗೂ ಮಹಿಷಾಸುರ ಮರ್ಧಿನಿ ಚಿತ್ರದಲ್ಲಿ ಎಸ್.ಜಾನಕಿಯವರೊಡನೆ "ತುಂಬಿತು ಮನವ ತಂದಿತು ಸುಖವ" ಎಂಬ ಯುಗಳ ಗೀತೆಯನ್ನು ಹಾಡಿದ್ದರು. ಈ ಮೂರು ಚಿತ್ರಗಳು ಜಿ.ಕೆ.ವೆಂಕಟೇಶ್ ಅವರ ಸಂಗೀತ ನಿರ್ದೇಶನವನ್ನು ಹೊಂದಿದ್ದವು.

ಜಿ.ಕೆ.ವೆಂಕಟೇಶ್ ಹಾಗೂ ಉಪೇಂದ್ರಕುಮಾರ್ ಸಂಗೀತದಲ್ಲಿ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.

೧೯೬೨ರಲ್ಲಿ, ದೇವಸುಂದರಿ ಚಿತ್ರದಲ್ಲಿ ಹಾಸ್ಯರತ್ನ ನರಸಿಂಹರಾಜು ಅವರ ಪಾತ್ರಕ್ಕೆ ಯುಗಳ ಗೀತೆಯೊಂದನ್ನೂ ಹಾಡಿದ್ದಾರೆ. ಡಾ. ರಾಜ್ ಅವರು ಬೇರೊಬ್ಬರ ಅಭಿನಯಕ್ಕೆ ಹಿನ್ನೆಲೆ ಗಾಯನ ಮಾಡಿದ ಮೊದಲ ಚಿತ್ರಗೀತೆಯಿದು.

೧೯೬೪ರಲ್ಲಿ, ನವಕೋಟಿನಾರಾಯಣ (ಭಕ್ತ ಪುರಂದರದಾಸ) ಚಲನಚಿತ್ರದಲ್ಲಿ ಕೆಲವು ಕೀರ್ತನೆ ಗಳನ್ನು ಹಾಡಿದ್ದಾರೆ.

ಜೀವನ ಚೈತ್ರ ಚಿತ್ರದಲ್ಲಿನ ನಾದಮಯ ಈ ಲೋಕವೆಲ್ಲಾ ಹಾಡಿನ ಗಾಯನಕ್ಕೆ ರಾಷ್ಟ್ರ ಪ್ರಶಸ್ತಿಯನ್ನು ಪಡೆದರು.

೨೦೦೩ರಲ್ಲಿ ಬಿಡುಗಡೆಯಾದ ಅಭಿ ಚಿತ್ರದ "ವಿಧಿ ಬರಹ ಎಂಥ ಘೋರ" ಹಾಗು ಅದೇ ವರ್ಷದ ಚಿಗುರಿದ ಕನಸು ಚಿತ್ರದ "ಬಂಧುವೇ ಓ ಬಂಧುವೇ" ಇವರು ಹಾಡಿದ ಇತ್ತೀಚಿನ ಚಿತ್ರಗೀತೆಗಳಾಗಿರುತ್ತವೆ.

ಚಿತ್ರಗೀತೆಗಳಷ್ಟೇ ಅಲ್ಲದೆ ಹಲವಾರು ಭಕ್ತಿಗೀತೆಗಳನ್ನು ಹಾಡಿರುವರು. ಕನ್ನಡವೇ ಸತ್ಯ, ಅನುರಾಗ, ಮಂಕುತಿಮ್ಮನ ಕಗ್ಗ - ರಾಜ್ ಕಂಠದಲ್ಲಿ ಮೂಡಿ ಬಂದ ಭಾವಗೀತೆ ಸಂಕಲನಗಳು.

ರಾಜ್ ಕುಮಾರ್ ಅವರು ತಮ್ಮ ಹೆಚ್ಚಿನ ಹಾಡುಗಳನ್ನು ಎಸ್. ಜಾನಕಿ ಮತ್ತು ವಾಣಿ ಜಯರಾಂ ಅವರೊಂದಿಗೆ ಹಾಡಿದ್ದಾರೆ. ಅಲ್ಲದೆ, ಪಿ. ಸುಶೀಲ, ಬೆಂಗಳೂರು ಲತಾ, ರತ್ನಮಾಲ ಪ್ರಕಾಶ್, ಮಂಜುಳಾ ಗುರುರಾಜ್, ಬಿ. ಆರ್. ಛಾಯಾ, ಕಸ್ತೂರಿ ಶಂಕರ್, ಚಿತ್ರಾ, ಸುಲೋಚನಾ ಅವರೊಂದಿಗೂ ಯುಗಳಗೀತೆಗಳನ್ನು ಹಾಡಿದ್ದಾರೆ.

ಹುಟ್ಟಿದರೇ ಕನ್ನಡನಾಡ್ನಲ್ ಹುಟ್ಟಬೇಕು, ಮೆಟ್ಟಿದರೇ, ಕನ್ನಡ ಮಣ್ಣನ್ ಮೆಟ್ಟಬೇಕು ಗೀತೆಯನ್ನು ಸಾಮಾನ್ಯವಾಗಿ ಹೋದೆಡೆಯಲ್ಲೆಲ್ಲಾ ಹಾಡುತ್ತಿದ್ದರು. ತಮ್ಮ 'ದಾದಾ ಸಾಹೇಬ್ ಫಾಲ್ಕೆ ಪುರಸ್ಕಾರ', ವನ್ನು ದೆಹಲಿಯಲ್ಲಿ ಪಡೆದ ಬಳಿಕ, ಮುಂಬಯಿ ಗೆ ಭೇಟಿಕೊಟ್ಟಾಗ, 'ಕರ್ನಾಟಕ ಸಂಘ' ದ ರಂಗಮಂಚದ ಮೇಲೆ, ಮೇಲಿನ ಗೀತೆಯನ್ನು ಅವರ ಮಕ್ಕಳ ಸಮೇತ ಕುಣಿದು-ಕುಪ್ಪಳಿಸಿ ಹಾಡಿದ ಸಡಗರ ಇನ್ನೂ ಮುಂಬಯಿ ನಗರದ, ಕನ್ನಡ ರಸಿಕರ ಮನದಲ್ಲಿ ಹಸಿರಾಗಿ ಉಳಿದಿದೆ.

ರಾಷ್ಟ್ರಕವಿ ಕುವೆಂಪು ರಚಿಸಿದ 'ಕನ್ನಡವೇ ಸತ್ಯ' ಹಾಡನ್ನು ಡಾ. ರಾಜಕುಮಾರ್‌ ಭಾವಗೀತೆಯ ಮೇರು ಕಲಾವಿದ ಡಾ. ಸಿ.ಅಶ್ವತ್ಥ್‌ ಅವರ ಸಂಗೀತ ನಿರ್ದೇಶನದಲ್ಲಿ ಹಾಡಿದ್ದಾರೆ. ಇದು ಮೈಸೂರು ಅನಂತಸ್ವಾಮಿಯವರ ಆವೃತ್ತಿಗಿಂತಲೂ ಭಾರೀ ಜನಪ್ರಿಯತೆ ಗಳಿಸಿತು.

ಕನ್ನಡಪರ ಚಳುವಳಿಗಳಲ್ಲಿ ಡಾ. ರಾಜ್

ಗೋಕಾಕ್ ಚಳುವಳಿಯಲ್ಲಿ ಡಾ. ರಾಜ್

ಗೋಕಾಕ್ ವರದಿಯು ಕನ್ನಡವನ್ನು ಪ್ರಾಥಮಿಕ ಶಿಕ್ಷಣದಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳುವುದು ಹಾಗು ಇನ್ನಿತರ ಮೂಲಭೂತ ಸೌಲಭ್ಯಗಳನ್ನು ಕನ್ನಡ ಭಾಷೆಗೆ ಕೊಡುವುದರ ಬಗ್ಗೆ ಸಿದ್ಧವಾಗಿತ್ತು. ಆದರೆ, ಈ ವರದಿಯು ಜಾರಿಗೆ ಬಂದಿರಲಿಲ್ಲ. ೧೯೮೧ರಲ್ಲಿ, ಪಾಟೀಲ ಪುಟ್ಟಪ್ಪ, ಚಂದ್ರಶೇಖರ ಪಾಟೀಲ್ ಮುಂತಾದ ಸಾಹಿತಿಗಳು, ಕನ್ನಡ ವಿದ್ಯಾರ್ಥಿಗಳು, ಹಲವು ಸಂಘಸಂಸ್ಥೆಗಳು ಗೋಕಾಕ್ ವರದಿಯನ್ನು ಜಾರಿಗೊಳಿಸುವಂತೆ ಚಳುವಳಿಯನ್ನು ಪ್ರಾರಂಭ ಮಾಡಿದರು. ಇದೇ ಚಳುವಳಿಯು ಗೋಕಾಕ್ ಚಳುವಳಿ ಎಂದೇ ಹೆಸರಾಯಿತು.

ಚಳುವಳಿಯು ಪ್ರಾರಂಭಗೊಂಡು ಹಲವಾರು ದಿನಗಳು ಕಳೆದರೂ, ಜನಸಾಮಾನ್ಯರಿಂದ ಉತ್ಸಾಹದ ಪ್ರತಿಕ್ರಿಯೆ ಕಂಡುಬರಲಿಲ್ಲ. ಈ ಸಮಯದಲ್ಲಿ, ಡಾ. ರಾಜ್ ಅವರನ್ನು ಚಳುವಳಿಗೆ ಆಹ್ವಾನಿಸಿ, ಚಳುವಳಿಯ ಬಲವರ್ಧನೆ ಮಾಡಬೇಕೆಂದು ಕೋರಲಾಯಿತು. ಡಾ. ರಾಜ್ ನೇತೃತ್ವದಲ್ಲಿ ಕನ್ನಡ ಚಿತ್ರರಂಗ, ಗೋಕಾಕ್ ಚಳುವಳಿಗೆ ಸಂಪೂರ್ಣ ಸಹಕಾರ ನೀಡಲು ಪ್ರಕಟಿಸಿ, ರಾಜ್ಯಾದ್ಯಂತ ಪ್ರವಾಸ ಕೈಗೊಂಡಿತು.

ಹಲವಾರು ಸಭೆಗಳು, ಭಾಷಣಗಳು ಕರ್ನಾಟಕದ ಪ್ರಮುಖ ನಗರಗಳಲ್ಲಿ ಜರುಗಿದವು. ಕರ್ನಾಟಕದ ಜನತೆ ಚಳುವಳಿಗೆ ಹಿಂದೆಂದಿಗಿಂತಲೂ ಹೆಚ್ಚಿನ ಉತ್ಸಾಹದಿಂದ ಪ್ರತಿಕ್ರಿಯಿಸಿದರು, ಭಾಗವಹಿಸಿದರು. ಕನ್ನಡದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು, ಅಭಿಮಾನ ಬೆಳೆಸಲು, ಕನ್ನಡ ಭಾಷೆಗೆ ಸಿಗಬೇಕಾದ ಹಕ್ಕುಗಳು, ಸೌಲಭ್ಯಗಳನ್ನು ಆಗಿನ ಕರ್ನಾಟಕ ಸರ್ಕಾರಕ್ಕೆ ಮನದಟ್ಟು ಮಾಡಿಕೊಡಲು, ಡಾ. ರಾಜ್ ಅವರ ಭಾಷಣಗಳು ಹಾಗು ಚಳುವಳಿಯ ನೇತೃತ್ವ ಸಹಾಯಕಾರಿಯಾದವು. ಗುಂಡೂರಾವ್ ನೇತೃತ್ವದ ಆಗಿನ ಕರ್ನಾಟಕ ಸರ್ಕಾರವು ಚಳುವಳಿಯ ತೀವ್ರತೆಗೆ ಸ್ಪಂದಿಸಿ, ಗೋಕಾಕ್ ವರದಿಯನ್ನು ಜಾರಿಗೊಳಿಸಿತು.

ಪ್ರಶಸ್ತಿ/ ಪುರಸ್ಕಾರಗಳು/ಬಿರುದುಗಳು

 ಪ್ರಶಸ್ತಿಗಳು

ಪದ್ಮಭೂಷಣ (ಭಾರತ ಸರ್ಕಾರದಿಂದ)

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ (೧೯೯೫ರಲ್ಲಿ ಭಾರತ ಸರ್ಕಾರದಿಂದ)

ಕರ್ನಾಟಕ ರತ್ನ (ಕರ್ನಾಟಕ ಸರ್ಕಾರ)

ರಾಷ್ಟ್ರಪ್ರಶಸ್ತಿ (ಜೀವನ ಚೈತ್ರ ಚಿತ್ರದಲ್ಲಿನ 'ನಾದಮಯ ಈ ಲೋಕವೆಲ್ಲಾ' ಹಾಡಿನ ಗಾಯನಕ್ಕೆ)

ಅತ್ಯುತ್ತಮ ನಟ - ಫಿಲ್ಮ್‌ಫೇರ್ ಪ್ರಶಸ್ತಿ (ಹತ್ತು ಬಾರಿ)

ಅತ್ಯುತ್ತಮ ನಟ - ರಾಜ್ಯಪ್ರಶಸ್ತಿ (ಒಂಭತ್ತು ಬಾರಿ)

ಕೆಂಟಕಿ ಕರ್ನಲ್ (ಅಮೆರಿಕದ ಕೆಂಟಕಿ ರಾಜ್ಯದ ಗವರ್ನರ್ ೧೯೮೫ರಲ್ಲಿ ಬೆಂಗಳೂರಲ್ಲಿ ನೀಡಿದರು)

ನಾಡೋಜ ಪ್ರಶಸ್ತಿ (ಕನ್ನಡ ವಿಶ್ವವಿದ್ಯಾಲಯ, ಹಂಪಿ)

ಗುಬ್ಬಿ ವೀರಣ್ಣ ಪ್ರಶಸ್ತಿ (ಕರ್ನಾಟಕ ಸರ್ಕಾರ)

ಕಲಾ ಕೌಸ್ತುಭ (ವೃತ್ತಿ ರಂಗಭೂಮಿಗೆ ಸಲ್ಲಿಸಿದ ಸೇವೆಗೆ, ಕರ್ನಾಟಕ ಸರ್ಕಾರದಿಂದ)

 ಪದವಿಗಳು

ಗೌರವ ಡಾಕ್ಟರೇಟ್(ಮೈಸೂರು ವಿಶ್ವವಿದ್ಯಾಲಯ)

 

ಬಿರುದುಗಳು

ನಟಸಾರ್ವಭೌಮ (೧೦೦ನೆಯ ಚಿತ್ರದ ಸಂದರ್ಭದಲ್ಲಿ)

ಗಾನಗಂಧರ್ವ (ಅಭಿಮಾನಿ ಸಂಘಗಳಿಂದ)

ವರನಟ (ಪತ್ರಕರ್ತರು, ಅಭಿಮಾನಿಗಳು)

ಅಣ್ಣಾವ್ರು (ಅಭಿಮಾನಿಗಳಿಂದ)

ರಸಿಕರ ರಾಜ (ಅಭಿಮಾನಿಗಳಿಂದ)

ಕನ್ನಡದ ಕಣ್ಮಣಿ (ಅಭಿಮಾನಿಗಳಿಂದ)

ಮೇರು ನಟ (ಅಭಿಮಾನಿಗಳಿಂದ)

ಡಾ. ರಾಜ್‌ಕುಮಾರ್ ರಸ್ತೆ

ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ, ಯಶವಂತಪುರ ಮೇಲ್ಸೇತುವೆಯಿಂದ ಪ್ರಸನ್ನ ಚಿತ್ರಮಂದಿರದವರೆಗೆ ರಾಜಾಜಿನಗರದ ಮೂಲಕ ಹಾದುಹೋಗುವ ಮುಖ್ಯರಸ್ತೆಗೆ ಡಾ. ರಾಜ್‌ಕುಮಾರ್ ರಸ್ತೆ ಎಂದು ಹೆಸರಿಸಲಾಗಿದೆ.

 ಗೂಗಲ್‌ ಡೂಡಲ್‌ ಗೌರವ

ಗೂಗಲ್‌ ಸರ್ಚ್‌‌ನ ಡೂಡಲ್‌ ವಿಭಾಗದವರು ಡಾ. ರಾಜ್‌ಕುಮಾರ್‌ ಅವರ ೮೮ನೇ ಹುಟ್ಟು ಹಬ್ಬದ ದಿನ ( ೨೪ ಏಪ್ರಿಲ್‌ ೨೦೧೭ ) ರಾಜ್‌ ಅವರ ಡೂಡಲ್‌ ಪ್ರದರ್ಶಿಸುವ ಮೂಲಕ ಗೌರವ ಸಲ್ಲಿಸಿದರು. ಈ ಡೂಡಲ್‌ ದೇಶಾದ್ಯಂತ ( google.co.in ) ಎಲ್ಲಾ ರಾಜ್ಯಗಳಲ್ಲೂ ಪ್ರದರ್ಶಿತಗೊಂಡು ಪರ ರಾಜ್ಯದವರಿಗೂ ರಾಜ್‌ ಅವರ ಬಗ್ಗೆ ಕುತೂಹಲ ಮೂಡುವಂತೆ ಮಾಡಿತು. ತೆಂಕಣ ಭಾರತದ ನಟರಿಗೆ ಗೂಗಲ್‌ ಈ ರೀತಿಯ ಗೌರವ ಸಲ್ಲಿಸಿರುವುದು ಇದೇ ಮೊದಲು. ಇದಕ್ಕಾಗಿ ಕನ್ನಡಿಗರು ಗೂಗಲ್‌ನವರಿಗೂ ಅಭಿನಂದನೆ ಸಲ್ಲಿಸಿದರು.


ರಾಜ್ ಕುರಿತ ಪುಸ್ತಕಗಳು

ಕನ್ನಡ ರಂಗಭೂಮಿ ಮತ್ತು ಸಿನೆಮಾಕ್ಕೆ ಡಾ. ರಾಜ್ ಕೊಡುಗೆ (ಪಿ.ಹೆಚ್.ಡಿ ನಿಬಂಧ)

ಬೆಂಗಳೂರಿನ ಬಸವನಗುಡಿಯಲ್ಲಿರುವ ವಿಜಯ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾದ ಡಿ. ಗುರುಮೂರ್ತಿ ಹಾರೋಹಳ್ಳಿ ಅವರು "ಕನ್ನಡ ರಂಗಭೂಮಿ ಮತ್ತು ಸಿನೆಮಾಕ್ಕೆ ಡಾ. ರಾಜ್ ಕೊಡುಗೆ" ಕುರಿತ ಸಂಶೋಧನಾತ್ಮಕ ಪ್ರಬಂಧ ಮಂಡಿಸಿ, ಮೈಸೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಈ ಸಂಶೋಧನೆಯ ಸಮಯದಲ್ಲಿ, ಡಾ. ರಾಜ್ ಅವರನ್ನು ಹಲವಾರು ಬಾರಿ ಸಂದರ್ಶಿಸಿದ್ದಾರೆ.

೧೯೯೭ರಲ್ಲಿ ಪ್ರಾರಂಭಿಸಿದ ಸಂಶೋಧನೆಯನ್ನು ನಾಲ್ಕುವರ್ಷಗಳ ಕಾಲ ಡಾ. ಮಳಲಿ ವಸಂತಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆಸಿದ ಗುರುಮೂರ್ತಿ ೨೦೦೧ರಲ್ಲಿ ಪಿ.ಹೆಚ್.ಡಿ ಪದವಿ ಪಡೆದರು.

ಪ್ರಾಣಪದಕ

ಪ್ರಾಣಪದಕ ಡಾ. ರಾಜಕುಮಾರ್ ಅವರನ್ನು ಕುರಿತ 2013ರ ಅಕ್ಟೋಬರ್ ತಿಂಗಳಿನಲ್ಲಿ ಅ. ನಾ. ಪ್ರಹ್ಲಾದರಾವ್ ಬರೆದ ಸ್ವಾರಸ್ಯಕರ ಸಂಗತಿಗಳ ಮತ್ತೊಂದು ಪುಸ್ತಕ. ಶ್ರೀಮತಿ ಪಾರ್ವತಮ್ಮ ರಾಜಕುಮಾರ್ ನೆನಪಿನಾಳದಲ್ಲಿನ ಡಾ. ರಾಜಕುಮಾರ್ ಸಂಗತಿಗಳನ್ನು ಅನಾವರಣಗೊಳಿಸುವ, ವಸಂತ ಪ್ರಕಾಶನ ಪ್ರಕಾಶನಗೊಳಿಸಿರುವ ಅ. ನಾ. ಪ್ರಹ್ಲಾದರಾವ್ ಬರೆದ ವಿಶಿಷ್ಟ ಪುಸ್ತಕ 'ಪ್ರಾಣಪದಕ'. ಸುಮಾರು 120 ಪುಟಗಳ ಈ ಪುಸ್ತಕದ ಲೇಖನಗಳು `ಮಂಗಳ` ವಾರಪತ್ರಿಕೆಯಲ್ಲಿ ಪ್ರಕಟಿಗೊಂಡಿದ್ದವು.

ಶ್ರೀಮತಿ ಪಾರ್ವತಮ್ಮ ರಾಜಕುಮಾರ್ ಅವರು ಬೇರೆ ಬೇರೆ ಸಂದರ್ಭಗಳಲ್ಲಿ ಲೇಖಕ ರೊಂದಿಗೆ ಹಲವು ವಿಷಯ ಗಳನ್ನು ನೆನಪು ಮಾಡಿಕೊಂಡರು. 'ಪ್ರಾಣಪದಕ' ಹೆಸರಿನಲ್ಲಿ 'ಮಂಗಳ' ವಾರಪತ್ರಿಕೆ ಈ ಲೇಖನಗಳನ್ನು ಪ್ರಕಟಿಸಿತ್ತು.

ಬಂಗಾರದ ಮನುಷ್ಯ

ಕನ್ನಡದ ವರನಟ ಡಾ. ರಾಜಕುಮಾರ್ ಅವರ ಜೀವನ ಹಾಗೂ ಸಾಧನೆ ಕುರಿತು ಕರ್ನಾಟಕ ಸರ್ಕಾರಕ್ಕಾಗಿ ಅ. ನಾ. ಪ್ರಹ್ಲಾದರಾವ್ ಬರೆದ ಬಂಗಾರದ ಮನುಷ್ಯ ಅತ್ಯಂತ ಜನಪ್ರಿಯ ಪುಸ್ತಕ.

     ಈ ಪುಸ್ತಕ ಇಂಗ್ಲಿಷ್ ಭಾಷೆಗೆ `ಡಾ. ರಾಜಕುಮಾರ್ ಇನ್ಮಿಟಬಲ್ ಆಕ್ಟರ್ ವಿಥ್ ಗೋಲ್ಡನ್ ವಾಯ್ಸ್` ಹೆಸರಿನಲ್ಲಿ ಭಾಷಾಂತರಗೊಂಡು ಅಮೆರಿಕದ ನ್ಯೂಜೆರ್ಸಿ ನಗರದಲ್ಲಿ ಬಿಡುಗಡೆಗೊಂಡಿತು. ಕನ್ನಡದ ನಟರೊಬ್ಬರನ್ನು ಕುರಿತ ಇಂಗ್ಲಿಷ್ ಪುಸ್ತಕವೊಂದು ಭಾರತದ ಹೊರಗಡೆ ಬಿಡುಗಡೆಗೊಂಡ ಮೊದಲ ಪುಸ್ತಕ ಇದೆಂಬ ದಾಖಲೆಯನ್ನೂ ಮಾಡಿತು. ಕನ್ನಡ ಪುಸ್ತಕ ಬಿಡುಗಡೆ ಗೊಂಡ ಸಂದರ್ಭದಲ್ಲಿ ಡಾ. ರಾಜಕುಮಾರ್ ಹಾಗೂ ಶ್ರೀಮತಿ ಪಾರ್ವತಮ್ಮ ರಾಜಕುಮಾರ್ ಅವರು ತಮ್ಮ ಮನೆಗೆ ಲೇಖಕರ ಕುಟುಂಬವನ್ನು ಬರಮಾಡಿಕೊಂಡು ಆತಿಥ್ಯ ನೀಡಿದ್ದರು.

೨೨೦ ಪುಟಗಳ ಈ ಪುಸ್ತಕ ಡಾ. ರಾಜಕುಮಾರ್ ಅವರಿಂದಲೇ ಪ್ರಶಂಸೆಗೆ ಒಳಗಾಯಿತು.

        ಇದು ಡಾ. ರಾಜಕುಮಾರ್ ಅವರನ್ನು ಕುರಿತಾದ ಮೊದಲ ಇಂಗ್ಲಿಷ್ ಪುಸ್ತಕವೇ ಅಲ್ಲದೆ, ದೇಶದ ಹೊರಗಡೆ ಬಿಡುಗಡೆ ಆದ ಡಾ. ರಾಜಕುಮಾರ್ ಕುರಿತಾದ ಮೊದಲ ಪುಸ್ತಕವೂ ಹೌದು. ಈ ಪುಸ್ತಕದಲ್ಲಿ ಡಾ. ರಾಜಕುಮಾರ್ ಚಲನಚಿತ್ರಗಳ ಬಗ್ಗೆ ವಿವರಗಳಷ್ಟೆ ಅಲ್ಲದೆ, ಅವರ ಸಾಮಾಜಿಕ ಬದುಕು ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಯ ವಿವರಗಳನ್ನು ದಾಖಲಿಸಲಾಗಿದೆ.

        ಕನ್ನಡ ಪುಸ್ತಕ ೨೦೦೬ರಲ್ಲಿ ಅಮೆರಿಕದ ವಾಷಿಂಗ್ಟನ್ ನಗರದಲ್ಲಿ ನಡೆದ ಅಕ್ಕ ಸಮ್ಮೇಳನ, ೨೦೦೬ರಲ್ಲಿ ಕುವ್ಯೆತ್ ಕನ್ನಡ ಸಮ್ಮೇಳನದಲ್ಲಿ ಬಿಡುಗಡೆಗೊಂಡಿತು. ಇಂಗ್ಲಿಷ್ ಪುಸ್ತಕ ಬೆಂಗಳೂರಿನಲ್ಲಿ ಶ್ರೀಮತಿ ಪಾವ೯ತಮ್ಮ ರಾಜಕುಮಾರ್ ಅವರಿಂದ ಬಿಡುಗಡೆಗೊಂಡಿತಲ್ಲದೆ, ಲಂಡನ್ ನಗರದಲ್ಲಿ ೨೦೦೮ರ ಆಗಸ್ಟ್ ತಿಂಗಳಿನಲ್ಲಿ ನಡೆದ ಕನ್ನಡ ಸಮ್ಮೇಳನದಲ್ಲಿ ಅಲ್ಲಿನ ಸೆನೆಟರ್ ಬಿಡುಗಡೆ ಮಾಡಿದರು.


ಅವರ ನಟನೆಯ ಐತಿಹಾಸಿಕ ಚಿತ್ರಗಳು

ಮಯೂರ

ಶ್ರೀ ಕೃಷ್ಣದೇವರಾಯ

ರಣಧೀರ ಕಂಠೀರವ

ಇಮ್ಮಡಿ ಪುಲಿಕೇಶಿ

ಕಿತ್ತೂರು ಚೆನ್ನಮ್ಮ

ಕವಿರತ್ನ ಕಾಳಿದಾಸ

ಬಭ್ರುವಾಹನ

ವೀರ ಕೇಸರಿ

 

ಭಕ್ತಿ ಪ್ರಧಾನ ಚಿತ್ರಗಳು

ಭಕ್ತ ಕನಕದಾಸ

ನವಕೋಟಿ ನಾರಾಯಣ (ಭಕ್ತ ಪುರಂದರದಾಸ)

ಸರ್ವಜ್ಞಮೂರ್ತಿ

ಮಹಾತ್ಮ ಕಬೀರ್

ಸಂತ ತುಕಾರಾಮ

ವಾಲ್ಮೀಕಿ

ಭೂಕೈಲಾಸ

ಹರಿಭಕ್ತ

ಭಕ್ತ ವಿಜಯ

ಭಕ್ತ ಚೇತ

ಭಕ್ತ ಕುಂಬಾರ

 ದೇವರ ಪಾತ್ರದಲ್ಲಿ

ಮಂತ್ರಾಲಯ ಮಹಾತ್ಮೆ

ಶ್ರೀ ಶ್ರೀನಿವಾಸ ಕಲ್ಯಾಣ

ಶ್ರೀ ರಾಮಾಂಜನೇಯ ಯುದ್ಧ

ಶ್ರೀಕೃಷ್ಣ ರುಕ್ಮಿಣಿ ಸತ್ಯಭಾಮ

ಶಿವ ಮೆಚ್ಚಿದ ಕಣ್ಣಪ್ಪ

ಮೂರೂವರೆ ವಜ್ರಗಳು

ಕೃಷ್ಣ ಗಾರುಡಿ

 ಪತ್ತೇದಾರ/ಗೂಢಚಾರಿ ಪಾತ್ರದಲ್ಲಿ

ಜೇಡರ ಬಲೆ

ಆಪರೇಷನ್ ಜಾಕ್‍ಪಾಟ್‍ನಲ್ಲಿ ಸಿ.ಐ.ಡಿ. ೯೯೯

ಗೋವಾದಲ್ಲಿ ಸಿ.ಐ.ಡಿ. ೯೯೯

ಸಿ.ಐ.ಡಿ. ರಾಜಣ್ಣ

ಬೆಂಗಳೂರು ಮೈಲ್

ಆಪರೇಷನ್ ಡೈಮಂಡ್ ರಾಕೆಟ್

ಭಲೇ ಹುಚ್ಚ

ಚೂರಿಚಿಕ್ಕಣ್ಣ

ಜೇಡರ ಬಲೆ,

ಆಪರೇಷನ್ ಜಾಕ್‍ಪಾಟ್‍ನಲ್ಲಿ ಸಿ.ಐ.ಡಿ. ೯೯೯,

ಗೋವಾದಲ್ಲಿ ಸಿ.ಐ.ಡಿ. ೯೯೯ ಮತ್ತು

ಆಪರೇಷನ್ ಡೈಮಂಡ್ ರಾಕೆಟ್ ಚಿತ್ರಗಳು ಜೇಮ್ಸ್‌ಬಾಂಡ್ ಮಾದರಿಯಲ್ಲಿ ಬಂದಂತಹ ಸರಣಿ ಚಲನಚಿತ್ರಗಳು. ಈ ನಾಲ್ಕೂ ಚಿತ್ರಗಳಲ್ಲಿ 'ಪ್ರಕಾಶ್' ಎಂಬ ಹೆಸರಿನ ಸಿ.ಐ.ಡಿ ೯೯೯ ಪಾತ್ರದಲ್ಲಿ ಡಾ. ರಾಜ್ ಅಭಿನಯಿಸಿದ್ದಾರೆ.

 

ಖಳ/ಪ್ರತಿನಾಯಕನ ಪಾತ್ರದಲ್ಲಿ

ಮಹಿಷಾಸುರ ಮರ್ದಿನಿ - ಮಹಿಷಾಸುರ

ಕರುಣೆಯೇ ಕುಟುಂಬದ ಕಣ್ಣು

ಸಾಕು ಮಗಳು

ಸತಿ ಶಕ್ತಿ - ರಕ್ತಾಕ್ಷ

ದಾರಿ ತಪ್ಪಿದ ಮಗ - ಪ್ರಕಾಶ್

ದಶಾವತಾರ

ಭಕ್ತ ಪ್ರಹ್ಲಾದ - ಹಿರಣ್ಯಕಶ್ಯಪು

ತುಂಬಿದ ಕೊಡ

ಶ್ರೀ ಕೃಷ್ಣಗಾರುಡಿ - ಅರ್ಜುನ

ಶ್ರೀ ಕನ್ನಿಕಾಪರಮೇಶ್ವರಿ ಕಥೆ - ರಾಜಾ ವಿಷ್ಣು ವರ್ಧನ

 

ಡಾ. ರಾಜ್ ಅತಿಥಿನಟನಾಗಿ ಕಾಣಿಸಿಕೊಂಡ ಚಿತ್ರಗಳು

ಭಕ್ತ ಪ್ರಹ್ಲಾದ (೧೯೪೨)

ಶ್ರೀ ಶ್ರೀನಿವಾಸ ಕಲ್ಯಾಣ (೧೯೫೨)

ನಾಡಿನ ಭಾಗ್ಯ

ಭಾಗ್ಯವಂತ

ಶಿವ ಮೆಚ್ಚಿದ ಕಣ್ಣಪ್ಪ

ಗಂಧದಗುಡಿ ಭಾಗ ೨

ಜೋಗಿ

 

ಡಾ.ರಾಜಕುಮಾರ್ ಅವರ 205 ಚಿತ್ರಗಳ ಪಟ್ಟಿ

ಕ್ರ. ಸಂ

ವರ್ಷ

ಚಿತ್ರದ ಹೆಸರು

1

1954

ಬೇಡರ ಕಣ್ಣಪ್ಪ

2

1955

ಸೋದರಿ

3

1956

ಭಕ್ತ ವಿಜಯ

4

1956

ಹರಿಭಕ್ತ

5

1956

ಓಹಿಲೇಶ್ವರ

6

1957

ಸತಿ ನಳಾಯಿನಿ

7

1957

ರಾಯರ ಸೊಸೆ

8

1958

ಭೂಕೈಲಾಸ

9

1958

ಶ್ರೀ ಕೃಷ್ಣಗಾರುಡಿ

10

1958

ಅಣ್ಣ ತಂಗಿ

11

1959

ಜಗಜ್ಯೋತಿ ಬಸವೇಶ್ವರ

12

1959

ಧರ್ಮ ವಿಜಯ

13

1959

ಮಹಿಷಾಸುರ ಮರ್ಧಿನಿ

14

1959

ಅಬ್ಬಾ ಆ ಹುಡುಗಿ

15

1960

ರಣಧೀರ ಕಂಠೀರವ

16

1960

ರಾಣಿ ಹೊನ್ನಮ್ಮ

17

1960

ಆಶಾಸುಂದರಿ

18

1960

ದಶಾವತಾರ

19

1960

ಭಕ್ತ ಕನಕದಾಸ

20

1961

ಶ್ರೀಶೈಲ ಮಹಾತ್ಮೆ

21

1961

ಕಿತ್ತೂರು ಚೆನ್ನಮ್ಮ

22

1961

ಕಣ್ತೆರೆದು ನೋಡು

23

1961

ಕೈವಾರ ಮಹಾತ್ಮೆ

24

1961

ಭಕ್ತ ಚೇತ

25

1961

ನಾಗಾರ್ಜುನ

26

1962

ಗಾಳಿಗೋಪುರ

27

1962

ಭೂದಾನ

28

1962

ಸ್ವರ್ಣಗೌರಿ

29

1962

ದೇವಸುಂದರಿ

30

1962

ಕರುಣೆಯೇ ಕುಟುಂಬದ ಕಣ್ಣು

31

1962

ಮಹಾತ್ಮ ಕಬೀರ್

32

1962

ವಿಧಿವಿಲಾಸ

33

1962

ತೇಜಸ್ವಿನಿ

34

1963

ವಾಲ್ಮೀಕಿ

35

1963

ನಂದಾದೀಪ

36

1963

ಸಾಕು ಮಗಳು

37

1963

ಕನ್ಯಾರತ್ನ

38

1963

ಗೌರಿ

39

1963

ಜೀವನ ತರಂಗ

40

1963

ಮಲ್ಲಿ ಮದುವೆ

41

1963

ಕುಲವಧು

42

1963

ಕಲಿತರೂ ಹೆಣ್ಣೇ

43

1963

ವೀರಕೇಸರಿ

44

1963

ಮನ ಮೆಚ್ಚಿದ ಮಡದಿ

45

1963

ಸತಿ ಶಕ್ತಿ

46

1963

ಚಂದ್ರಕುಮಾರ

47

1963

ಸಂತ ತುಕಾರಾಮ

48

1963

ಶ್ರೀರಾಮಾಂಜನೇಯ ಯುದ್ಧ

49

1964

ನವಕೋಟಿ ನಾರಾಯಣ

50

1964

ಚಂದವಳ್ಳಿಯ ತೋಟ

51

1964

ಶಿವರಾತ್ರಿ ಮಹಾತ್ಮೆ

52

1964

ಅನ್ನಪೂರ್ಣ

53

1964

ತುಂಬಿದ ಕೊಡ

54

1964

ಶಿವಗಂಗೆ ಮಹಾತ್ಮೆ

55

1964

ಮುರಿಯದ ಮನೆ

56

1964

ಪ್ರತಿಜ್ಞೆ

57

1964

ನಾಂದಿ

58

1965

ನಾಗಪೂಜ

59

1965

ಚಂದ್ರಹಾಸ

60

1965

ಸರ್ವಜ್ಞಮೂರ್ತಿ

61

1965

ವಾತ್ಸಲ್ಯ

62

1965

ಸತ್ಯ ಹರಿಶ್ಚಂದ್ರ

63

1965

ಮಹಾಸತಿ ಅನುಸೂಯ

64

1965

ಇದೇ ಮಹಾ ಸುದಿನ

65

1965

ಬೆಟ್ಟದ ಹುಲಿ

66

1965

ಸತಿ ಸಾವಿತ್ರಿ

67

1965

ಮದುವೆ ಮಾಡಿ ನೋಡು

68

1965

ಪತಿವ್ರತಾ

69

1966

ಮಂತ್ರಾಲಯ ಮಹಾತ್ಮೆ

70

1966

ಕಠಾರಿವೀರ

71

1966

ಬಾಲನಾಗಮ್ಮ

72

1966

ತೂಗುದೀಪ

73

1966

ಪ್ರೇಮಮಯಿ

74

1966

ಕಿಲಾಡಿ ರಂಗ

75

1966

ಮಧುಮಾಲತಿ

76

1966

ಎಮ್ಮೆ ತಮ್ಮಣ್ಣ

77

1966

ಮೋಹಿನಿ ಭಸ್ಮಾಸುರ

78

1966

ಶ್ರೀ ಕನ್ನಿಕಾಪರಮೇಶ್ವರಿ ಕಥೆ

79

1966

ಸಂಧ್ಯಾರಾಗ

80

1967

ಪಾರ್ವತಿ ಕಲ್ಯಾಣ

81

1967

ಸತಿಸುಕನ್ಯ

82

1967

ಗಂಗೆ ಗೌರಿ

83

1967

ರಾಜಶೇಖರ

84

1967

ಲಗ್ನಪತ್ರಿಕೆ

85

1967

ರಾಜದುರ್ಗದ ರಹಸ್ಯ

86

1967

ದೇವರ ಗೆದ್ದ ಮಾನವ

87

1967

ಬೀದಿ ಬಸವಣ್ಣ

88

1967

ಮನಸ್ಸಿದ್ದರೆ ಮಾರ್ಗ

89

1967

ಬಂಗಾರದ ಹೂವು

90

1967

ಚಕ್ರತೀರ್ಥ

91

1967

ಇಮ್ಮಡಿ ಪುಲಿಕೇಶಿ

92

1968

ಜೇಡರ ಬಲೆ

93

1968

ಗಾಂಧಿನಗರ

94

1968

ಮಹಾಸತಿ ಅರುಂಧತಿ

95

1968

ಮನಸ್ಸಾಕ್ಷಿ

96

1968

ಸರ್ವಮಂಗಳ

97

1968

ಭಾಗ್ಯದೇವತೆ

98

1968

ಬೆಂಗಳೂರು ಮೈಲ್

99

1968

ಹಣ್ಣೆಲೆ ಚಿಗುರಿದಾಗ

100

1968

ಭಾಗ್ಯದ ಬಾಗಿಲು

101

1968

ನಟಸಾರ್ವಭೌಮ

102

1968

ರೌಡಿ ರಂಗಣ್ಣ

103

1968

ಧೂಮಕೇತು (ಚಲನಚಿತ್ರ)

104

1968

ಅಮ್ಮ

105

1968

ಸಿಂಹಸ್ವಪ್ನ

106

1968

ಗೋವಾದಲ್ಲಿ ಸಿ.ಐ.ಡಿ.999

107

1968

ಮಣ್ಣಿನ ಮಗ

108

1969

ಮಾರ್ಗದರ್ಶಿ

109

1969

ಗಂಡೊಂದು ಹೆಣ್ಣಾರು

110

1969

ಮಲ್ಲಮ್ಮನ ಪವಾಡ

111

1969

ಚೂರಿ ಚಿಕ್ಕಣ್ಣ

112

1969

ಪುನರ್ಜನ್ಮ

113

1969

ಭಲೇ ರಾಜ

114

1969

ಉಯ್ಯಾಲೆ

115

1969

ಚಿಕ್ಕಮ್ಮ

116

1969

ಮೇಯರ್ ಮುತ್ತಣ್ಣ

117

1969

ಆಪರೇಷನ್ ಜಾಕ್‍ಪಾಟ್‍ನಲ್ಲಿ ಸಿ.ಐ.ಡಿ. 999

118

1970

ಶ್ರೀ ಕೃಷ್ಣದೇವರಾಯ

119

1970

ಕರುಳಿನ ಕರೆ

120

1970

ಹಸಿರು ತೋರಣ

121

1970

ಭೂಪತಿ ರಂಗ

122

1970

ಮಿಸ್ಟರ್ ರಾಜ್‍ಕುಮಾರ್

123

1970

ಭಲೇ ಜೋಡಿ

124

1970

ಸಿ.ಐ.ಡಿ. ರಾಜಣ್ಣ

125

1970

ನನ್ನ ತಮ್ಮ

126

1970

ಬಾಳು ಬೆಳಗಿತು

127

1970

ದೇವರ ಮಕ್ಕಳು

128

1970

ಪರೋಪಕಾರಿ

129

1971

ಕಸ್ತೂರಿ ನಿವಾಸ

130

1971

ಬಾಳ ಬಂಧನ

131

1971

ಕುಲಗೌರವ

132

1971

ನಮ್ಮ ಸಂಸಾರ

133

1971

ಕಾಸಿದ್ರೆ ಕೈಲಾಸ

134

1971

ತಾಯಿದೇವರು

135

1971

ಪ್ರತಿಧ್ವನಿ

136

1971

ಸಾಕ್ಷಾತ್ಕಾರ

137

1971

ನ್ಯಾಯವೇ ದೇವರು

138

1971

ಶ್ರೀಕೃಷ್ಣ ರುಕ್ಮಿಣಿ ಸತ್ಯಭಾಮ

139

1972

ಜನ್ಮರಹಸ್ಯ

140

1972

ಸಿಪಾಯಿರಾಮು

141

1972

ಬಂಗಾರದ ಮನುಷ್ಯ

142

1972

ಹೃದಯ ಸಂಗಮ

143

1972

ಕ್ರಾಂತಿವೀರ

144

1972

ಭಲೇ ಹುಚ್ಚ

145

1972

ನಂದಗೋಕುಲ

146

1972

ಜಗಮೆಚ್ಚಿದ ಮಗ

147

1973

ದೇವರು ಕೊಟ್ಟ ತಂಗಿ

148

1973

ಬಿಡುಗಡೆ (ಚಲನಚಿತ್ರ)

149

1973

ಸ್ವಯಂವರ (ಚಲನಚಿತ್ರ)

150

1973

ಗಂಧದ ಗುಡಿ

151

1973

ದೂರದ ಬೆಟ್ಟ

152

1973

ಮೂರೂವರೆ ವಜ್ರಗಳು

153

1974

ಬಂಗಾರದ ಪಂಜರ

154

1974

ಎರಡು ಕನಸು

155

1974

ಸಂಪತ್ತಿಗೆ ಸವಾಲ್

156

1974

ಭಕ್ತ ಕುಂಬಾರ

157

1974

ಶ್ರೀ ಶ್ರೀನಿವಾಸ ಕಲ್ಯಾಣ

158

1974

ದಾರಿ ತಪ್ಪಿದ ಮಗ

159

1975

ಮಯೂರ

160

1975

ತ್ರಿಮೂರ್ತಿ

161

1976

ಪ್ರೇಮದ ಕಾಣಿಕೆ

162

1976

ಬಹದ್ದೂರ್ ಗಂಡು

163

1976

ರಾಜ ನನ್ನ ರಾಜ

164

1976

ನಾ ನಿನ್ನ ಮರೆಯಲಾರೆ

165

1976

ಬಡವರ ಬಂಧು

166

1977

ಬಬ್ರುವಾಹನ_(ಚಲನಚಿತ್ರ)

167

1977

ಭಾಗ್ಯವಂತರು

168

1977

ಗಿರಿಕನ್ಯೆ

169

1977

ಸನಾದಿ ಅಪ್ಪಣ್ಣ

170

1977

ಒಲವು ಗೆಲವು

171

1978

ಶಂಕರ್ ಗುರು

172

1978

ಆಪರೇಷನ್ ಡೈಮಂಡ್ ರ್ಯಾಕೆಟ್

173

1978

ತಾಯಿಗೆ ತಕ್ಕ ಮಗ

174

1979

ಹುಲಿಯ ಹಾಲಿನ ಮೇವು

175

1979

ನಾನೊಬ್ಬ ಕಳ್ಳ

176

1980

ರವಿಚಂದ್ರ

177

1980

ವಸಂತಗೀತ

178

1981

ಹಾವಿನ ಹೆಡೆ

179

1981

ನೀ ನನ್ನ ಗೆಲ್ಲಲಾರೆ

180

1981

ಕೆರಳಿದ ಸಿಂಹ

181

1982

ಹೊಸಬೆಳಕು

182

1982

ಹಾಲು ಜೇನು

183

1982

ಚಲಿಸುವ ಮೋಡಗಳು

184

1983

ಕವಿರತ್ನ ಕಾಳಿದಾಸ

185

1983

ಕಾಮನಬಿಲ್ಲು

186

1983

ಭಕ್ತ ಪ್ರಹ್ಲಾದ

187

1983

ಎರಡು ನಕ್ಷತ್ರಗಳು

188

1984

ಸಮಯದ ಗೊಂಬೆ

189

1984

ಶ್ರಾವಣ ಬಂತು

190

1984

ಯಾರಿವನು

191

1984

ಅಪೂರ್ವ ಸಂಗಮ

192

1985

ಅದೇ ಕಣ್ಣು

193

1985

ಜ್ವಾಲಾಮುಖಿ

194

1985

ಧ್ರುವತಾರೆ

195

1986

ಭಾಗ್ಯದ ಲಕ್ಷ್ಮಿ ಬಾರಮ್ಮ

196

1986

ಅನುರಾಗ ಅರಳಿತು

197

1986

ಗುರಿ

198

1987

ಒಂದು ಮುತ್ತಿನ ಕಥೆ

199

1987

ಶ್ರುತಿ ಸೇರಿದಾಗ

200

1988

ದೇವತಾ ಮನುಷ್ಯ

201

1989

ಪರಶುರಾಮ್

202

1992

ಜೀವನ ಚೈತ್ರ

203

1993

ಆಕಸ್ಮಿಕ

204

1994

ಒಡಹುಟ್ಟಿದವರು

205

2000

ಶಬ್ದವೇಧಿ




 



**********************

ಮಾಹಿತಿ ಕೃಪೆ: ವಿಕಿಪೀಡಿಯಾ

**********************